ಹೊಸದಿಲ್ಲಿ, ಜುಲೈ 16: ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 19ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ವಿವಿಧ ರಾಜಕೀಯ ನಾಯಕರು, ಕಲಾವಿದರು ಹಾಗೂ ಸಾರ್ವಜನಿಕರು ಮಾಡಿರುವ ಮನವಿಯನ್ನು ಸೌಜನ್ಯದಿಂದ ತಿರಸ್ಕರಿಸಿರುವ ವಾಂಗ್ಚುಕ್, ಜುಲೈ 20ರಂದು ನಡೆಯಲಿರುವ 'ಸಂಸತ್ ಚಲೋ' ಶಾಂತಿ ಯಾತ್ರೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡುವಂತೆ ದೇಶದ ಜನತೆಗೆ ಮನವಿ ಮಾಡಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಬಿಡುಗಡೆ ಮಾಡಿರುವ ಇತ್ತೀಚಿನ ವೈದ್ಯಕೀಯ ವರದಿಯ ಪ್ರಕಾರ, 59 ವರ್ಷದ ವಾಂಗ್ಚುಕ್ ಅವರ ಆರೋಗ್ಯದ ಮೇಲೆ ವೈದ್ಯರ ತಂಡ ನಿರಂತರ ನಿಗಾ ಇರಿಸಿದೆ. ಅವರ ತೂಕ 57.15 ಕೆಜಿಗೆ ಇಳಿದಿದ್ದು, ಕಳೆದ 24 ಗಂಟೆಗಳಲ್ಲಿ 400 ಗ್ರಾಂ ಹಾಗೂ ಉಪವಾಸ ಆರಂಭವಾದ ಬಳಿಕ ಒಟ್ಟು 9 ಕೆಜಿಗೂ ಹೆಚ್ಚು ತೂಕ ಕಳೆದುಕೊಂಡಿದ್ದಾರೆ. ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಮತ್ತು ಆಮ್ಲಜನಕದ ಮಟ್ಟವನ್ನು ವೈದ್ಯರು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅವರು ಪ್ರಜ್ಞಾವಸ್ಥೆಯಲ್ಲಿದ್ದರೂ ಆರೋಗ್ಯ ಸ್ಥಿತಿ ಸೂಕ್ಷ್ಮವಾಗಿರುವ ಕಾರಣ ನಿರಂತರ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಮತ್ತೊಂದು ವೇದಿಕೆಯಲ್ಲಿ ಉಪವಾಸ ಮುಂದುವರಿಸಿರುವ ಎಐಎಸ್ಎ ವಿದ್ಯಾರ್ಥಿ ಸಂಘಟನೆಯ ನಾಯಕರುಗಳಾದ ನೇಹಾ, ಮನೀಶ್ ಹಾಗೂ ಆಮೀನ್ ಅವರ ಆರೋಗ್ಯವೂ ಹದಗೆಟ್ಟಿದೆ ಎಂದು ಸಂಘಟನೆ ತಿಳಿಸಿದೆ. ನೇಹಾ ಉಪವಾಸ ಆರಂಭವಾದ ಬಳಿಕ 5.85 ಕೆಜಿ ತೂಕ ಕಳೆದುಕೊಂಡಿದ್ದರೆ, ಮನೀಶ್ 8.2 ಕೆಜಿ ಹಾಗೂ ಆಮೀನ್ 8.3 ಕೆಜಿ ತೂಕ ಕಳೆದುಕೊಂಡಿದ್ದಾರೆ. ಈ ಮೂವರಲ್ಲೂ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಎಐಎಸ್ಎ ತಿಳಿಸಿದೆ.
ಪ್ರತಿಭಟನೆಯ ಸಂದರ್ಭದಲ್ಲಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಜಂಟಿ ಕಾರ್ಯದರ್ಶಿ ದಾನಿಶ್, ಜೆಎನ್ಯು ಬರಾಕ್ ಹಾಸ್ಟೆಲ್ ಅಧ್ಯಕ್ಷ ಹೃಷಿಕೇಶ್ ಹಾಗೂ ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕ ದೀಪಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಘಟನೆ ಪ್ರಕಟಿಸಿದೆ.
ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಸಂಸದ ಶಶಿ ತರೂರು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ರಾಜಕೀಯ ನಾಯಕರು ಮನವಿ ಮಾಡಿದ್ದಾರೆ. ನಟಿ ಜೀನತ್ ಅಮಾನ್ ಕೂಡ ಪ್ರತಿಭಟನಾಕಾರರೊಂದಿಗೆ ಸರ್ಕಾರ ತಕ್ಷಣ ಮಾತುಕತೆ ಆರಂಭಿಸಬೇಕೆಂದು ಆಗ್ರಹಿಸಿದ್ದಾರೆ.
ಗುಜರಾತ್ನ ಮಾಜಿ ಮುಖ್ಯಮಂತ್ರಿ ಶಂಕರಸಿಂಗ್ ವಘೇಲಾ ಹಾಗೂ ನಟಿ ಸ್ವರಾ ಭಾಸ್ಕರ್ ಜಂತರ್ ಮಂತರ್ಗೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ 1,800ಕ್ಕೂ ಹೆಚ್ಚು ಕಲಾವಿದರು, ಶಿಕ್ಷಣ ತಜ್ಞರು, ಬರಹಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಬಹಿರಂಗ ಪತ್ರ ಬಿಡುಗಡೆ ಮಾಡಿ, ಪ್ರತಿಭಟನೆಯ ಉದ್ದೇಶಕ್ಕೆ ಬೆಂಬಲ ವ್ಯಕ್ತಪಡಿಸುವುದರ ಜೊತೆಗೆ ವಾಂಗ್ಚುಕ್ ಉಪವಾಸವನ್ನು ಕೊನೆಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಪತ್ರಕ್ಕೆ ನಟರಾದ ನಾಸೀರುದ್ದೀನ್ ಶಾ ಮತ್ತು ರತ್ನಾ ಪಾಠಕ್ ಶಾ, ಬರಹಗಾರ್ತಿ ಅರುಂಧತಿ ರಾಯ್, ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್, ಶಿಕ್ಷಣ ತಜ್ಞರಾದ ಜಯತಿ ಘೋಷ್, ಅನುರಾಧಾ ಚೆನಾಯ್, ವಿದ್ವಾಂಸರಾದ ನಿವೇದಿತಾ ಮೆನನ್ ಸೇರಿದಂತೆ ಹಲವು ಗಣ್ಯರು ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಈ ಮಧ್ಯೆ, ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ತುರ್ತು ವೈದ್ಯಕೀಯ ನೆರವು ಒದಗಿಸುವಂತೆ ಕೋರಿ ದಿಲ್ಲಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಅಗತ್ಯವಿದ್ದರೆ ಬಲವಂತವಾಗಿ ಆಹಾರ ನೀಡುವುದು ಸೇರಿದಂತೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೇಂದ್ರ ಹಾಗೂ ದಿಲ್ಲಿ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಉಪವಾಸ ಕೊನೆಗೊಳಿಸುವಂತೆ ಬಂದಿರುವ ಮನವಿಗಳಿಗೆ ಪ್ರತಿಕ್ರಿಯಿಸಿರುವ ವಾಂಗ್ಚುಕ್, ವೀಡಿಯೊ ಸಂದೇಶ ಬಿಡುಗಡೆ ಮಾಡಿ, "ನನ್ನ ಉಪವಾಸವನ್ನು ಕೊನೆಗೊಳಿಸುವಂತೆ ಕೇಳಬೇಡಿ. ಅದರ ಬದಲು ಜುಲೈ 20ರಂದು ನಡೆಯಲಿರುವ 'ಸಂಸತ್ ಚಲೋ' ಶಾಂತಿ ಯಾತ್ರೆಯಲ್ಲಿ ನನ್ನೊಂದಿಗೆ ಕೈಜೋಡಿಸಿ. ಸಂಸತ್ತಿನತ್ತ ಶಾಂತಿಯುತ ಮೆರವಣಿಗೆ ನಡೆಸೋಣ" ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ಇದರೊಂದಿಗೆ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿರುವ ಸಿಜೆಪಿ, ದೇಶಾದ್ಯಂತ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಜುಲೈ 20ರಂದು ನಡೆಯಲಿರುವ 'ಸಂಸತ್ ಚಲೋ' ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾಗರಿಕರನ್ನು ಮತ್ತೊಮ್ಮೆ ಆಹ್ವಾನಿಸಿದೆ.