ಬೈಲಹೊಂಗಲ, ಜುಲೈ 21: 46ನೇ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕಳಸಾ–ಬಂಡೂರಿ ನಾಲಾ ಜೋಡಣೆ ಯೋಜನೆಯನ್ನು ಶೀಘ್ರ ಜಾರಿಗೊಳಿಸುವಂತೆ ರೈತರು ಸರ್ಕಾರವನ್ನು ಆಗ್ರಹಿಸಿದರು.
ಕರುನಾಡ ರಕ್ಷಣಾ ವೇದಿಕೆ ಹಾಗೂ ವಿವಿಧ ರೈತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ, ರೈತರ ಸನ್ಮಾನ ಹಾಗೂ ಸಸಿ ವಿತರಣೆ ನಡೆಯಿತು.
ನೇಗಿಲ ಯೋಗಿ ರೈತ ಪ್ರಶಾಂ ಸೇವಾ ಸಂಘದ ರಾಜ್ಯಾಧ್ಯಕ್ಷ ಶಂಕರ ಬೋಳಣ್ಣವರ ಮಾತನಾಡಿ, ಉತ್ತರ ಕರ್ನಾಟಕದ ನೀರಾವರಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲಸಾ–ಬಂಡೂರಿ ಯೋಜನೆಯಿಂದ ಮಾತ್ರ ಸಾಧ್ಯವಾಗಲಿದೆ. ಸರ್ಕಾರ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಮಾತನಾಡಿ, ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಕಲ್ಯಾಣಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದರು. ಬೈಲಹೊಂಗಲ ತಾಲ್ಲೂಕಿಗೆ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಅವರು ಒತ್ತಾಯಿಸಿದರು.
ಸುಮಾರು ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮುರಗೋಡ–ಚಚಡಿ ಎತ್ತಿನಹೊಳೆ ನೀರಾವರಿ ಯೋಜನೆಯನ್ನೂ ಶೀಘ್ರ ಪೂರ್ಣಗೊಳಿಸಬೇಕು. ಇದರಿಂದ ಸಾವಿರಾರು ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಅವರು ಹೇಳಿದರು.
ಕರುನಾಡ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ರೈತ ಘಟಕದ ರಾಜ್ಯಾಧ್ಯಕ್ಷ ಅಪ್ಪಾಸಾಹೇಬ ಲಕ್ಕುಂಡಿ ಹಾಗೂ ಜಿಲ್ಲಾ ಸಂಯೋಜಕ ಆನಂದಗೌಡ ಪಾಟೀಲ ಮಾತನಾಡಿ, ನೀರಾವರಿ ಸೌಲಭ್ಯ ವಿಸ್ತರಣೆ, ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಂಬಲ ಮತ್ತು ರೈತಪರ ನೀತಿಗಳ ಪರಿಣಾಮಕಾರಿ ಜಾರಿಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗಾಡ್ ಫೌಂಡೇಶನ್ ಹಾಗೂ ಸಾಂಗ್ಲಿಯ ಕುಲ್ಲೊಳ್ಳಿ ನೇತ್ರಾಲಯದ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ 202 ಮಂದಿಗೆ ಕಣ್ಣಿನ ತಪಾಸಣೆ, 204 ಮಂದಿಗೆ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಸಲಾಗಿದ್ದು, 26 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನೂರಾರು ರೈತರು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.