ಬೆಂಗಳೂರು, ಮೇ 16 : ಮುಸ್ಲಿಮರಿಗೆ ಹಿಂದುಳಿದ ವರ್ಗಗಳ ಪ್ರವರ್ಗ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ಮರುಸ್ಥಾಪಿಸಬೇಕು, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ರದ್ದುಪಡಿಸಬೇಕು ಅಥವಾ ತಿದ್ದುಪಡಿ ಮಾಡಬೇಕು, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕು ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟವು ಸರಕಾರದ ಮುಂದಿಟ್ಟಿದೆ.
ನಗರದ ಟೌನ್ಹಾಲ್ನಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಮುಸ್ಲಿಮ್ ಸಮಾವೇಶದಲ್ಲಿ ಸಾಮಾಜಿಕ ಹೋರಾಟಗಾರ ಮುಹಮ್ಮದ್ ಯಾಸೀನ್ ಮಲ್ಪೆ ಆಶಯ ಭಾಷಣ ಮಾಡಿದರು.
ಹಿಂದಿನ ಬಿಜೆಪಿ ಸರಕಾರವು ಮುಸ್ಲಿಮ್ ಹೆಣ್ಣು ಮಕ್ಕಳ ಹಿಜಾಬ್ಗೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ಸರಕಾರ ಹೇಳಿತ್ತು. ಆದರೆ, ಸಮಾವೇಶದ ದಿನಾಂಕ ಘೋಷಿಸುವವರೆಗೂ ಹಿಜಾಬ್ ಮೇಲಿನ ನಿರ್ಬಂಧ ಮುಂದುವರಿದಿತ್ತು. ಇದೀಗ ಅದನ್ನು ಹಿಂಪಡೆದಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.
2023ರಲ್ಲಿ ಬಿಜೆಪಿ ಸರಕಾರ ರದ್ದುಪಡಿಸಿದ್ದ ಪ್ರವರ್ಗ 2ಬಿ ಮೀಸಲಾತಿಯನ್ನು ಕಾಂಗ್ರೆಸ್ ಸರಕಾರ ಮೂರು ವರ್ಷವಾದರೂ ಮರುಸ್ಥಾಪಿಸಿಲ್ಲ. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಶಾಸನಾತ್ಮಕ ಜಾರಿಗೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಕ್ಷಣವೇ 2ಬಿ ಮೀಸಲಾತಿ ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.
2023ರ ಜೂನ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸುವ ತೀರ್ಮಾನ ಕೈಗೊಂಡಿದ್ದರೂ, ಇದುವರೆಗೂ ಮಸೂದೆ ಮಂಡನೆಯಾಗಿಲ್ಲ. ಇದರಿಂದ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಕೂಡಲೇ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಜಾನುವಾರು ವಧೆ ತಡೆ ಮತ್ತು ಸಂರಕ್ಷಣಾ ಕಾಯ್ದೆ-2020 ರೈತರು, ಕಾರ್ಮಿಕರು, ಮಾಂಸ ವ್ಯಾಪಾರಿಗಳು ಹಾಗೂ ಜಾನುವಾರು ಸಾಗಾಟಗಾರರ ಪಾಲಿಗೆ ಸಂಕಷ್ಟ ತಂದಿದೆ. ಈ ಕಾಯ್ದೆಯನ್ನು ರದ್ದುಪಡಿಸಲು ಅಥವಾ ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವರ್ಷಕ್ಕೆ ₹10 ಸಾವಿರ ಕೋಟಿ ಮೀಸಲಿಡುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಆದರೆ, 2026-27ರ ಬಜೆಟ್ನಲ್ಲಿ ₹4,762 ಕೋಟಿ ಮಾತ್ರ ಮೀಸಲಿಡಲಾಗಿದೆ. ಘೋಷಿಸಿದ ಭರವಸೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ವಕ್ಫ್ ಆಸ್ತಿಗಳ ಅತಿಕ್ರಮಣ, ಅಕ್ರಮ ವರ್ಗಾವಣೆ, ಕಡಿಮೆ ಮೌಲ್ಯದ ಲೀಸ್ ಮತ್ತು ದುರ್ಬಲ ಆಡಳಿತ ಮುಂದುವರಿದಿದೆ. ವಕ್ಫ್ ಆಸ್ತಿಗಳ ರಕ್ಷಣೆ ಮತ್ತು ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.
ಕಾಂತರಾಜ್ ಆಯೋಗ ಹಾಗೂ ಮಧುಸೂದನ್ ಆರ್. ನಾಯಕ್ ನೇತೃತ್ವದ ಸಮೀಕ್ಷೆಗಳ ವರದಿ ಇನ್ನೂ ಸದನದಲ್ಲಿ ಮಂಡನೆಯಾಗಿಲ್ಲ. ಇದರಿಂದ ಮೀಸಲಾತಿ ಮತ್ತು ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದ ಪ್ರಮುಖ ಸುಧಾರಣೆಗಳು ಸ್ಥಗಿತಗೊಂಡಿವೆ ಎಂದು ದೂರಿದರು.
ಮುಸ್ಲಿಮರನ್ನು ಗುರಿಯಾಗಿಸಿಕೊಂಡ ದ್ವೇಷ ಭಾಷಣ, ಗುಂಪು ಹಿಂಸಾಚಾರ, ಆರ್ಥಿಕ ಬಹಿಷ್ಕಾರ ಮತ್ತು ಅನೈತಿಕ ಪೊಲೀಸ್ಗಿರಿ ಘಟನೆಗಳು ಮುಂದುವರಿದಿವೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿಧಾನಸಭೆ, ವಿಧಾನಪರಿಷತ್, ನಿಗಮ-ಮಂಡಳಿ, ವಿಶ್ವವಿದ್ಯಾಲಯ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಕಡಿಮೆಯಾಗಿದೆ. ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆ ಶೇ.13 ಇದ್ದರೂ ಸಮರ್ಪಕ ಅವಕಾಶ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಕ್ರಮಗಳನ್ನು ಸರಕಾರ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿಬ್ಬಂದಿ ನೇಮಕಾತಿ, ವಿದ್ಯಾರ್ಥಿವೇತನ ವಿತರಣೆ, ಪಠ್ಯಕ್ರಮ ಹಾಗೂ ವಸತಿನಿಲಯ ಸೌಲಭ್ಯಗಳಲ್ಲಿ ಇನ್ನೂ ಹೆಚ್ಚಿನ ಸುಧಾರಣೆ ಅಗತ್ಯವಿದೆ ಎಂದು ಹೇಳಿದರು.
ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಅಲ್ಪಸಂಖ್ಯಾತರ ಮೇಲೆ ಪರಿಣಾಮ ಬೀರಿದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ವಿರೋಧವಾಗಿ ಕರ್ನಾಟಕ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಬೇಕು. ರಾಜ್ಯದಲ್ಲಿ ಯಾವುದೇ ಮತದಾರ ಮತಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.