LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿರುಗಾಳಿಗೆ ಮರಗಳು ಬಿದ್ದು ೫ ಮನೆಗಳು ಜಖಂ: ಜನಜೀವನ ಅಸ್ತವ್ಯಸ್ತ

ಬೆಳಗಾವಿ, ಮೇ 13 : ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಗಾಳಿ ಮತ್ತು ಮಳೆಯಿಂದಾಗಿ ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗೆ ಉರುಳಿಬಿದ್ದ ಪರಿಣಾಮ ಹಲವು ಕಡೆ ಸಂಚಾರ ಹಾಗೂ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. 

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದಲ್ಲಿ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಬಿದ್ದದ್ದರಿಂದ ಐದು ಮನೆಗಳು ಹಾನಿಗೊಳಗಾಗಿದ್ದು ಆದರೆ ಅದೃಷ್ಟವಶಾತ್‌ ಪ್ರಾಣಹಾನಿ ಆಗಿಲ್ಲ.

ಕಕ್ಕೇರಿ ಗ್ರಾಮದಲ್ಲಿ  ಬಿರುಗಾಳಿಯ ಅಬ್ಬರಕ್ಕೆ ರಸ್ತೆ ಬದಿಯ ದೊಡ್ಡ ದೊಡ್ಡ ಮರಗಳು ನೆಲಕ್ಕುರುಳಿದ್ದು, ಹಲವು ರಸ್ತೆಗಳು ಬಂದ್‌ ಆಗಿವೆ. ರಸ್ತೆಗಳ ಮೇಲೆ ಮರಗಳು ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ವಾಹನಗಳು ಮಧ್ಯದಲ್ಲೇ ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಭಾರಿ ಗಾಳಿಗೆ ಅನೇಕ ವಿದ್ಯುತ್‌ ಕಂಬಗಳು ನೆಲಕ್ಕುರುಳಿದ ಪರಿಣಾಮ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ರಾತ್ರಿ ಪೂರ್ತಿ ಕತ್ತಲೆಯಲ್ಲೇ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲೂ ಬಿರುಗಾಳಿ ಹಾಗೂ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಮರಗಳು ಹಾಗೂ ವಿದ್ಯುತ್‌ ಕಂಬಗಳು ಉರುಳಿಬಿದ್ದ ಪರಿಣಾಮ ಬಾಗಲಕೋಟೆ-ಬಾದಾಮಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳೀಯರು ಹಾಗೂ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿ ಸಂಚಾರ ಪುನಃ ಆರಂಭಿಸಲು ಹರಸಾಹಸ ಪಟ್ಟರು.

ಕರಾವಳಿ ಭಾಗವಾದ ಮಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಏಕಾಏಕಿ ಸುರಿದ ಭಾರಿ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದರು. ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಯಿತು.

ಕಾರವಾರ ಹಾಗೂ ಹುಬ್ಬಳ್ಳಿಯಲ್ಲೂ ಮಳೆ ಆರ್ಭಟ ಮುಂದುವರಿದಿದೆ. ನಿರಂತರ ಮಳೆಯಿಂದ ರಸ್ತೆಗಳಲ್ಲಿ ನೀರು ಹರಿದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿತು. ಕೆಲವೆಡೆ ಜಲಾವೃತ ಪರಿಸ್ಥಿತಿ ನಿರ್ಮಾಣವಾಗಿ ಸಾರ್ವಜನಿಕರು ಪರದಾಡಿದರು.

ಬೆಳಿಗ್ಗೆಯಿಂದಲೇ ಪಾಲಿಕೆ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಕೈಗೊಂಡಿವೆ. ವಿದ್ಯುತ್‌ ಸಂಪರ್ಕ ಪುನಃ ಕಲ್ಪಿಸಲು ಹೆಸ್ಕಾಂ ಸಿಬ್ಬಂದಿಯೂ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಮಳೆಯ ವಾತಾವರಣ ಮುಂದುವರಿದಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST