ಬೆಳಗಾವಿ, ಜುಲೈ 16: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಅಂತರ್ ಜಿಲ್ಲಾ ಖದೀಮರ ಗ್ಯಾಂಗ್ನ್ನು ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ತೋಟದ ಜಮೀನಿನಲ್ಲಿರುವ ಶ್ರೀ ರಾಣಮ್ಮಾ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಬಂಗಾರದ ಮಂಗಳಸೂತ್ರ ಹಾಗೂ ಬೆಳ್ಳಿಯ ಆಭರಣಗಳ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ, ಅಡಳಹಟ್ಟಿ ಗ್ರಾಮದ ನಿವಾಸಿಗಳಾದ ವಿಜಯ ಭೀಮಪ್ಪ ಗುಡದಿನ್ನಿ, ಕಲೇಶ ಅಲ್ಲಪ್ಪ ಮೂರಾಬಟ್ಟಿ, ಶಿವಾನಂದ ವಿಠಲ ಚಿಕ್ಕಟ್ಟಿ ಹಾಗೂ ಸಂಗಮೇಶ ಶಂಕರ ಐನಾಪೂರ ಎಂಬ ನಾಲ್ವರನ್ನು ಬಂಧಿಸಿದೆ.
ಬಂಧಿತರಿಂದ ವಿವಿಧ ದೇವಸ್ಥಾನಗಳಿಂದ ಕಳವಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಮತ್ತು ಕಳ್ಳತನಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇತರ ಕಳ್ಳತನ ಪ್ರಕರಣಗಳ ಬಗ್ಗೆಯೂ ತನಿಖೆ ಮುಂದುವರಿದಿದ್ದು, ಇನ್ನಷ್ಟು ಕೃತ್ಯಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.