ಬೆಳಗಾವಿ, ಜೂ. 30: ವಿವಾಹಿತೆಯೊಬ್ಬಳು ಯುವಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಯುವಕನ ಮನೆ ಮೇಲೆ ದಾಳಿ ನಡೆಸಿ ಮನೆ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವಿವಾಹಿತೆ ನಾಗವ್ವ ಯಲ್ಲಪ್ಪ ನಾಯಕನೊಂದಿಗೆ ಪರಾರಿಯಾಗಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಹಾಗೂ ಪತಿಯ ಕಡೆಯ ಸಂಬಂಧಿಕರು ಯಲ್ಲಪ್ಪನ ಮನೆ ಮೇಲೆ ದಾಳಿ ನಡೆಸಿದ್ದರು. ನೂರಾರು ಜನರ ಗುಂಪು ಮನೆಯಲ್ಲಿ ನುಗ್ಗಿ ಹಂಚುಗಳು, ಅಲ್ಮಾರಿ, ಟಿವಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಧ್ವಂಸಗೊಳಿಸಿದ್ದಲ್ಲದೆ, ಚಿನ್ನಾಭರಣ, ನಗದು ಹಾಗೂ ಕುರಿಗಳನ್ನು ದೋಚಿಕೊಂಡು ಹೋಗಿರುವ ಆರೋಪವೂ ಕೇಳಿಬಂದಿತ್ತು.
ಈ ಸಂಬಂಧ ಯಲ್ಲಪ್ಪನ ತಂದೆ ನೀಡಿದ ದೂರಿನ ಮೇರೆಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ನಾಗರಾಜ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ತನಿಖೆ ಆರಂಭಿಸಿದ ಮಾರಿಹಾಳ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಗಳಾದ ನಾಗರಾಜ ನಾಯಕ, ರವಿ ಬೀಜಗತ್ತಿ ಹಾಗೂ ಈಶ್ವರ ಮುಚ್ಚಂಡಿ ಅವರನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಆರೋಪಿಗಳು ನಾಗವ್ವ ಹಾಗೂ ಆಕೆಯ ಪತಿ ಬಸಪ್ಪ ಅವರ ಸಂಬಂಧಿಕರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ಪೊಲೀಸ್ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.