ಬೆಂಗಳೂರು, ಜುಲೈ 20: ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗುತ್ತಿರುವ ಪರಿಣಾಮ ಕಳೆದ ಹತ್ತು ದಿನಗಳಿಂದ ಕುಸಿದಿದ್ದ ಪ್ರಮುಖ ಜಲಾಶಯಗಳ ಒಳಹರಿವು ಮತ್ತೆ ಏರಿಕೆ ಕಂಡಿದೆ. ಮಲೆನಾಡು, ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಹಲವು ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಸೋಮವಾರದ ಮಾಹಿತಿಯ ಪ್ರಕಾರ, ಐದು ಪ್ರಮುಖ ಜಲಾಶಯಗಳಿಗೆ 10 ಸಾವಿರ ಕ್ಯೂಸೆಕ್ಗಿಂತ ಹೆಚ್ಚು ನೀರು ಹರಿದು ಬರುತ್ತಿದೆ.
ಬೆಳಗಾವಿ ಜಿಲ್ಲೆಯ ಘಟಪ್ರಭಾ ಜಲಾಶಯಕ್ಕೆ 10,810 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೇವಲ 140 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 12.94 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.45ರಷ್ಟು ಭರ್ತಿಯಾಗಿದೆ.
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಅತ್ಯಧಿಕ 40,173 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 13,250 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 94.64 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.77ರಷ್ಟು ಭರ್ತಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸೂಪಾ ಜಲಾಶಯಕ್ಕೆ 14,931 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 3,941 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 40.34 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.28ರಷ್ಟು ಭರ್ತಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯಕ್ಕೆ 12,592 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 2,168 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 33.39 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.22ರಷ್ಟು ಭರ್ತಿಯಾಗಿದೆ.
ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯಕ್ಕೆ 16,668 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 7,261 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 20.26 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.61ರಷ್ಟು ಭರ್ತಿಯಾಗಿದೆ.
ಇದರ ಜೊತೆಗೆ ಭದ್ರಾ ಜಲಾಶಯಕ್ಕೆ 6,972 ಕ್ಯೂಸೆಕ್, ವರಾಹಿಗೆ 4,342 ಕ್ಯೂಸೆಕ್, ಮಲಪ್ರಭಾಕ್ಕೆ 4,117 ಕ್ಯೂಸೆಕ್, ಹಾರಂಗಿಗೆ 3,898 ಕ್ಯೂಸೆಕ್, ಕಬಿನಿಗೆ 2,818 ಕ್ಯೂಸೆಕ್, ಹೇಮಾವತಿಗೆ 1,479 ಕ್ಯೂಸೆಕ್, ತುಂಗಭದ್ರೆಗೆ 1,017 ಕ್ಯೂಸೆಕ್ ಹಾಗೂ ಕೆಆರ್ಎಸ್ಗೆ 828 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಮಾತ್ರ ಇನ್ನೂ ಒಳಹರಿವು ಶೂನ್ಯವಾಗಿದೆ.