ರಾಯಚೂರು: ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 18 ತಿಂಗಳ ಹೆಣ್ಣು ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕೆ. ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ.
ಮೃತ ಮಗುವನ್ನು ಅಬ್ದುಲ್ ರಜಾಕ ಮತ್ತು ನದಾಫ ದಂಪತಿಯ ಪುತ್ರಿ ಅನಂ (18 ತಿಂಗಳು) ಎಂದು ಗುರುತಿಸಲಾಗಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಅನಂ, ಪೋಷಕರ ಗಮನಕ್ಕೆ ಬಾರದೆ ರಸ್ತೆಗೆ ಬಂದಿದ್ದಳು. ಈ ವೇಳೆ ಸಮೀಪದ ಕೋಳಿ ಅಂಗಡಿಯ ಬಳಿ ಜಮಾಯಿಸಿದ್ದ ಬೀದಿ ನಾಯಿಗಳ ಹಿಂಡು ಏಕಾಏಕಿ ಮಗುವಿನ ಮೇಲೆ ದಾಳಿ ನಡೆಸಿದೆ. ನಾಯಿಗಳು ಮಗುವನ್ನು ಮನಬಂದಂತೆ ಕಚ್ಚಿ ಎಳೆದಾಡಿದ್ದು, ಮಗುವಿನ ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ ಪೋಷಕರು ನಾಯಿಗಳನ್ನು ಓಡಿಸಿ ಮಗುವನ್ನು ರಕ್ಷಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು. ಆದರೆ ರಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮಗು ಕೊನೆಯುಸಿರೆಳೆದಿದೆ.
ಈ ದುರ್ಘಟನೆ ಗ್ರಾಮದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.