ಗೋಕಾಕ, ಆಗಸ್ಟ್ 6: ತಾಲ್ಲೂಕಿನ ಕೊಣ್ಣೂರು ಗ್ರಾಮದ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೃತರನ್ನು ಸೈಫ್ ಮುಲ್ಲಾ (29), ಸಿಜಾ ಮುಲ್ಲಾ (4) ಹಾಗೂ ಇಮ್ತಿಯಾಜ ಬಡಗಾಂವ (35) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಜಿಹಾನ್ ಶಾರುಕ ಕುಡಚಿಕರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಕಾಕ ತಾಲ್ಲೂಕಿನ ಕರೆಮ್ಮ ದೇವಿ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಹಿಡಕಲ್ನಿಂದ ಗೋಕಾಕದತ್ತ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ನಲ್ಲಿದ್ದ ಸೈಫ್ ಮುಲ್ಲಾ, ಅವರ ನಾಲ್ಕು ವರ್ಷದ ಪುತ್ರಿ ಸಿಜಾ ಹಾಗೂ ಸ್ನೇಹಿತ ಇಮ್ತಿಯಾಜ್ ಬಡಗಾಂವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಕೂಡಲೇ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.