ಹಮೀರಪುರ, ಮೇ 29 : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ 6 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಹಮೀರಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಮೃತರನ್ನು ಬಾಂದಾ ಜಿಲ್ಲೆಯ ಚಿಲ್ಲಾ ಗ್ರಾಮದ ಲೋಕೇಂದ್ರ ನಿಶಾದ (22), ಕುಲದೀಪ ನಿಶಾದ (19), ಭೂರಾಗಢದ ಸಾವಂತ ಯಾದವ (28), ಹಮೀರಪುರ ಜಿಲ್ಲೆಯ ಸ್ವಾಸ ಖುರ್ದ್ ಗ್ರಾಮದ ಸಭಾಜೀತ (30), ಪುಷ್ಪೇಂದ್ರ ಸಿಂಗ್ ಚೌಹಾಣ (34) ಹಾಗೂ ಅಚ್ಪುರ್ ಗ್ರಾಮದ ರಾಜೇಶ ಪಾಲ್ (42) ಎಂದು ಗುರುತಿಸಲಾಗಿದೆ.
ಬುಧವಾರ ತಡರಾತ್ರಿ ಹಮೀರಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿತ್ತು. ಬಿರುಗಾಳಿಯಿಂದ ರಕ್ಷಿಸಿಕೊಳ್ಳಲು ಹಲವಾರು ಕಾರ್ಮಿಕರು ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಕೆಳಭಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಸೇತುವೆಯ ಛಾವಣಿ ಮತ್ತು ಅದರ ಕೆಲವು ಭಾಗಗಳು ಏಕಾಏಕಿ ಕುಸಿದು ಬಿದ್ದಿವೆ. ಅವಶೇಷಗಳಡಿ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದು, ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅವಶೇಷಗಳಡಿ ಸಿಲುಕಿದ್ದ ಕೆಲವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮೃತರ ಕುಟುಂಬಗಳಿಗೆ ಜಿಲ್ಲಾಡಳಿತ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲಾಗುತ್ತಿದೆ.