ಬೆಂಗಳೂರು, ಮೇ 12 : ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲವಾದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗುವ ಕನಸು ಕಂಡಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ವರ್ಷಗಳಿಂದ ನೀಟ್ ಪರೀಕ್ಷೆಯಲ್ಲಿ ಒಂದಲ್ಲ ಒಂದು ಗೊಂದಲ ಹಾಗೂ ಅಕ್ರಮಗಳು ನಡೆಯುತ್ತಲೇ ಇವೆ. ಇದಕ್ಕೆ ಕೊನೆಯೇ ಇಲ್ಲದಂತಾಗಿದ್ದು, ಇದರ ಸಂಪೂರ್ಣ ಹೊಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕಿಡಿಕಾರಿದರು.
ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯದ ಗಮನಕ್ಕೆ ಹಲವು ಬಾರಿ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಪರಿಣಾಮ ಮತ್ತೊಮ್ಮೆ ದೊಡ್ಡ ಪ್ರಮಾದ ಸಂಭವಿಸಿದೆ ಎಂದು ಅವರು ಆರೋಪಿಸಿದರು.
ತಪ್ಪಿತಸ್ಥರನ್ನು ಕಾನೂನಿನ ಮುಂದೆ ನಿಲ್ಲಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇದು ಕೇಂದ್ರ ಸರ್ಕಾರದ ಅಮರ್ಥತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಮತ್ತೊಮ್ಮೆ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರು ಅನಗತ್ಯ ಮಾನಸಿಕ ಒತ್ತಡ ಅನುಭವಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಪ್ರತಿ ವರ್ಷ ನಡೆಯುತ್ತಿರುವ ಪ್ರಮಾದಗಳನ್ನು ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ ಎಂಬುದಕ್ಕೆ ಇದು ಸಾಕ್ಷಿ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂದು ಶರಣಪ್ರಕಾಶ ಪಾಟೀಲ ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಭಾಷಣ ಮಾಡುವುದರಿಂದ ಸಾಲದು. ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಡಬೇಕು. ಪರೀಕ್ಷಾ ಪೇ ಚರ್ಚಾ ನಡೆಸುವವರು ಮೊದಲು ನೀಟ್ ಪರೀಕ್ಷೆಯ ಗೊಂದಲಗಳನ್ನು ಸರಿಪಡಿಸಲಿ ಎಂದು ಟೀಕಿಸಿದರು.
ಕರ್ನಾಟಕದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿದಾಗ ಇಂತಹ ಯಾವುದೇ ಪ್ರಮಾದ ನಡೆದಿಲ್ಲ. ರಾಜ್ಯದ ಪರೀಕ್ಷಾ ಮಾದರಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರಕ್ಕೆ ಪರೀಕ್ಷೆ ನಡೆಸುವ ಸಾಮರ್ಥ್ಯವೇ ಇಲ್ಲದ ಕಾರಣ ಪ್ರತಿ ವರ್ಷ ತಪ್ಪುಗಳೇ ಮರುಕಳಿಸುತ್ತಿವೆ. ರಾಜಸ್ಥಾನ ಹಾಗೂ ಹರಿಯಾಣದಲ್ಲಿನ ಕೆಲವು ಕೋಚಿಂಗ್ ಕೇಂದ್ರಗಳು ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳುತ್ತಿವೆ. ಇದರಲ್ಲಿ ಕೇಂದ್ರ ಸರ್ಕಾರದವರೂ ಪಾಲುದಾರರಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು, ಸಂಬಂಧಪಟ್ಟ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಅಕ್ರಮಗಳಲ್ಲಿ ತೊಡಗುವ ಕೋಚಿಂಗ್ ಕೇಂದ್ರಗಳ ಮೇಲೆ ಕಠಿಣ ಕಡಿವಾಣ ಹಾಕುವ ಅಗತ್ಯವಿದೆ ಎಂದು ಶರಣಪ್ರಕಾಶ ಪಾಟೀಲ ಹೇಳಿದರು.