
ಬೆಳಗಾವಿ, ಸೆ. 16 : ಗಣೇಶೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುವ ಮಹಾನಗರದ ಜನತೆ ಯಾವುದೇ ರೀತಿಯ ಅನಾಹುತ, ತೊಂದರೆಗಳಿಗೆ ಅವಕಾಶವಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಿ, ಶಿಸ್ತು ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಮಹಾನಗರಪಾಲಿಕೆ ಮೇಯರ್ ಪ್ರೀತಿ ಕಾಮಕರ್ ಮನವಿ ಮಾಡಿದರು.
ಮಹಾನಗರ ಪಾಲಿಕೆಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ ನಗರದ ಜನತೆಗೆ ಗಣೇಶೋತ್ಸವದ ಶುಭಾಶಯ ಕೋರಿದ ಅವರು, ಉತ್ತಮ ಮಳೆ, ಸಮೃದ್ಧ ಬೆಳೆ ದೊರೆತು ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಗಣೇಶನಲ್ಲಿ ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಪೂಜೆಯಲ್ಲಿ ಪಾಲ್ಗೊಂಡು ಉಪಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಲಾಗಿದೆ. ಸಭೆಗಳಲ್ಲಿ ಕೈಗೊಂಡ ನಿರ್ಣಯ ಹಾಗೂ ರೂಪುರೇಷೆಗಳಂತೆ ಉತ್ಸವವನ್ನು ಶಿಸ್ತುಬದ್ಧವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬೆಳಗಾವಿಯ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ. ಸಾರ್ವಜನಿಕರು ಶ್ರದ್ಧೆ, ಭಕ್ತಿ ಮತ್ತು ಸಂತಸದಿಂದ ಉತ್ಸವದಲ್ಲಿ ಪಾಲ್ಗೊಂಡು ಶಾಂತಿ, ಸೌಹಾರ್ದ ಕಾಪಾಡಬೇಕು ಎಂದು ಅವರು ಮನವಿ ಮಾಡಿದರು.
ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೇಯಸ್ ನಾಕಾಡಿ, ರಮೇಶ ಮೈಲುಗೋಳ, ರಾಜು ಭಾತಕಾಂಡೆ, ಸಾರಿಕಾ ಪಾಟೀಲ ಸೇರಿದಂತೆ ನಗರಸೇವಕರು ಹಾಗೂ ಪಾಲಿಕೆ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.