ಬೆಂಗಳೂರು, ಏ. 17 : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೂ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದು, ಅಪರಾಧಿಗಳಿಂದ ಒಟ್ಟು ₹16 ಲಕ್ಷ ದಂಡ ವಸೂಲಿ ಮಾಡಿ ಅದನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಹಾಗೂ ಸಹೋದರ ಗುರುನಾಥ್ ಗೌಡ ಅವರಿಗೆ ಪರಿಹಾರವಾಗಿ ನೀಡಲು ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ಏಪ್ರಿಲ್ 15ರಂದು ದೋಷಿಗಳೆಂದು ಘೋಷಿಸಲಾಗಿತ್ತು. ಶಿಕ್ಷೆಯ ಪ್ರಮಾಣ ಕುರಿತು ವಾದ-ಪ್ರತಿವಾದ ಆಲಿಸಿದ ಬಳಿಕ ಏಪ್ರಿಲ್ 17ರಂದು ಅಂತಿಮ ಶಿಕ್ಷೆ ಪ್ರಕಟಿಸಲಾಗಿದೆ.
ಸಿಬಿಐ ಪರ ವಕೀಲರು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವಾದ ಮಂಡಿಸಿದ್ದರೆ, ಆರೋಪಿಗಳ ಪರ ವಕೀಲರು ಶಿಕ್ಷೆ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಎರಡೂ ವಾದಗಳನ್ನು ಆಲಿಸಿದ ನ್ಯಾಯಾಲಯ ಅಂತಿಮವಾಗಿ ಜೀವಾವಧಿ ಶಿಕ್ಷೆ ವಿಧಿಸಿದೆ.
2016ರ ಜೂನ್ನಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ಸುಮಾರು 8 ವರ್ಷಗಳ ಕಾಲ ನಡೆಯಿತು. ಪ್ರಕರಣದಲ್ಲಿ 2 ರಿಂದ 16 ಹಾಗೂ 18ನೇ ಆರೋಪಿಗಳು ಕೊಲೆ, ಅಪರಾಧಿಕ ಒಳಸಂಚು ಹಾಗೂ ಸಾಕ್ಷ್ಯ ನಾಶ ಆರೋಪಗಳಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಮಾನಿಸಿದೆ.
ಇದಲ್ಲದೆ ಅಕ್ರಮ ಕೂಟ, ಗಲಭೆ ಹಾಗೂ ಆಯುಧಗಳಿಂದ ದಾಳಿ ಸೇರಿದಂತೆ ವಿವಿಧ ಕಲಂಗಳಡಿ ಆರೋಪಿಗಳು ಶಿಕ್ಷೆಗೆ ಗುರಿಯಾಗಿದ್ದಾರೆ. 19ನೇ ಆರೋಪಿಯಾದ ಟಿಂಗರೀಕರ್ ಸಾರ್ವಜನಿಕ ಸೇವೆಯಲ್ಲಿದ್ದು ತಪ್ಪು ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ನೆರವಾದ ಪ್ರಕರಣದಲ್ಲೂ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ಮೊದಲನೇ ಆರೋಪಿ ಬಸವರಾಜ್ ಮುತ್ತಗಿ ಮತ್ತು 17ನೇ ಆರೋಪಿ ಶಿವಾನಂದ್ ಅವರನ್ನು ಮಾಫಿ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. 20ನೇ ಮತ್ತು 21ನೇ ಆರೋಪಿಗಳನ್ನು ನ್ಯಾಯಾಲಯ ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.