ಬೆಂಗಳೂರು, ಆಗಸ್ಟ್ 13: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ನೂತನ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನದ ಕಲಾಪ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯ ಮೊದಲ ದಿನದ ಕಲಾಪಕ್ಕೆ ಗೈರಾಗಿರುವುದು ಗಮನ ಸೆಳೆಯಿತು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸದನ ಪ್ರವೇಶಿಸುವ ಮುನ್ನ ಬಾಗಿಲಿಗೆ ನಮಸ್ಕರಿಸಿದರು. ಬಳಿಕ ಮುಖ್ಯಮಂತ್ರಿಗೆ ಮೀಸಲಾಗಿರುವ ಪೀಠದ ಬಳಿಗೆ ತೆರಳಿ ಅದಕ್ಕೂ ಶಿರಬಾಗಿ ನಮಸ್ಕರಿಸಿದರು.
ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ವಿಧಾನಸಭೆಯ ಪೀಠಕ್ಕೆ ಗೌರವ ಸಲ್ಲಿಸುವ ಮೂಲಕ ಡಿ.ಕೆ.ಶಿವಕುಮಾರ ಅವರು ತಮ್ಮ ಮೊದಲ ಅಧಿವೇಶನದ ದಿನವನ್ನು ಆರಂಭಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕೋಟ್ಯಾಂತರ ಕನ್ನಡಿಗರ ಆಶೀರ್ವಾದದೊಂದಿಗೆ, ಪ್ರಜಾಪ್ರಭುತ್ವದ ಆಶಯಕ್ಕೆ ಶಿರಬಾಗಿ ಸದನಕ್ಕೆ ಮುಖ್ಯಮಂತ್ರಿಯಾಗಿ ನನ್ನ ಮೊದಲ ಹೆಜ್ಜೆ’ ಎಂದು ಬರೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಗೈರು: ನೂತನ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನದ ಮೊದಲ ದಿನದ ಕಲಾಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸದನದಲ್ಲಿ ಅವರ ಅನುಪಸ್ಥಿತಿ ಗಮನ ಸೆಳೆಯಿತು.