LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಡರೋಗಿಗಳಿಂದ ಹಣ ವಸೂಲಿ ಬೇಡ: ಆಸ್ಪತ್ರೆಗಳಿಗೆ ಖಾದರ್ ಖಡಕ್ ಎಚ್ಚರಿಕೆ

ಮಂಗಳೂರು, ಜೂ. 8 : ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಂದ ಆಯುಷ್ಮಾನ್ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ಯಾವುದೇ ಚಿಕಿತ್ಸಾ ವೆಚ್ಚ ಪಡೆಯಬಾರದು. ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಆರೋಗ್ಯ ಮಿತ್ರರು ತಕ್ಷಣ ಮಧ್ಯಪ್ರವೇಶಿಸಿ ಉಚಿತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಈ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದ ಆರೋಗ್ಯ ಮಿತ್ರರ ವಿರುದ್ಧ ಇಲಾಖಾ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮೊದಲ ಸಭೆಯನ್ನು ಪಡೀಲ್‌ನ ಪ್ರಜಾಸೌಧದಲ್ಲಿ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಆರೋಗ್ಯ ಮಿತ್ರರನ್ನು ನೇಮಕ ಮಾಡಲಾಗಿದೆ. ಅವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಆರೋಗ್ಯ ಕ್ಷೇತ್ರದಲ್ಲಿ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವುದು ಹಾಗೂ ಫಲಕಾರಿಯಾಗದ ಕಾರ್ಯಕ್ರಮಗಳನ್ನು ಮರುಪರಿಶೀಲಿಸುವ ಬಗ್ಗೆ ರಾಜ್ಯವ್ಯಾಪಿ ಅಧ್ಯಯನ ನಡೆಸಲಾಗುವುದು ಎಂದು ಹೇಳಿದರು.

ಆಯುಷ್ಮಾನ್ ಸೇರಿದಂತೆ ಸರಕಾರಿ ಯೋಜನೆಗಳ ವ್ಯಾಪ್ತಿಗೆ ಒಳಪಡುವ ಖಾಸಗಿ ಆಸ್ಪತ್ರೆಗಳು ನಿಯಮ ಉಲ್ಲಂಘಿಸಿದರೆ ಅಥವಾ ಯೋಜನೆಗಳನ್ನು ದುರುಪಯೋಗಪಡಿಸಿಕೊಂಡರೆ ಅವರಿಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಲಾಗುವುದು ಎಂದು ಖಾದರ್ ಸ್ಪಷ್ಟಪಡಿಸಿದರು.

ಈ ಹಿಂದೆ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬಗಳಿಗೆ ಶೇ.70ರಷ್ಟು ನೆರವು ದೊರೆಯುತ್ತಿತ್ತು. ಆದರೆ ಈಗಿನ ವ್ಯವಸ್ಥೆಯಲ್ಲಿ ರೋಗಿಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ. ಈ ಕುರಿತು ಮರುಪರಿಶೀಲನೆ ನಡೆಸಿ ಎಪಿಎಲ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ದೊರೆಯುವಂತೆ ಹೊಸ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ರಾಜ್ಯದ ಸರಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನಿವಾರಿಸಲು ವಿಶೇಷ ಯೋಜನೆ ರೂಪಿಸಲಾಗುವುದು. ವೈದ್ಯರನ್ನು ಸರಕಾರಿ ಸೇವೆಯತ್ತ ಆಕರ್ಷಿಸಲು ಪ್ರೋತ್ಸಾಹಕ ಕ್ರಮಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ನಡೆಸಿದ ಸಭೆಯಲ್ಲಿ ಆರೋಗ್ಯ ಕ್ಷೇತ್ರದ ಹಲವು ಸಮಸ್ಯೆಗಳು ಬೆಳಕಿಗೆ ಬಂದಿವೆ. ಸಮಸ್ಯೆಗಳನ್ನು ಬಗೆಹರಿಸದೆ ಯಾವುದೇ ಯೋಜನೆಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಾಧ್ಯವಿಲ್ಲ. ಸರಕಾರಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಾಗಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ಮುಂದುವರಿದಿರುವುದು ಚಿಂತಾಜನಕವಾಗಿದೆ ಎಂದು ಹೇಳಿದರು.

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ವೈದ್ಯರಿಗೆ ಮೂರು ವರ್ಷಗಳ ಸೇವೆಯ ಬಳಿಕ ಖಾಯಂ ನೇಮಕಾತಿ ನೀಡುವ ಹಿಂದಿನ ವ್ಯವಸ್ಥೆಯನ್ನು ಮರುಪರಿಶೀಲಿಸಲಾಗುವುದು. ಉದ್ಯೋಗ ಭದ್ರತೆ ನೀಡಿದರೆ ಹೆಚ್ಚಿನ ವೈದ್ಯರು ಸರಕಾರಿ ಸೇವೆಗೆ ಬರಲು ಆಸಕ್ತಿ ತೋರುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿಸಿದರು.

ಗುಡ್ಡಗಾಡು, ಬುಡಕಟ್ಟು ಹಾಗೂ ದುರ್ಗಮ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಹೆಚ್ಚುವರಿ ವೇತನ ಮತ್ತು ಪ್ರೋತ್ಸಾಹಧನ ನೀಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಯುತ್ತಿದೆ. ಈ ಎಲ್ಲ ಪ್ರಸ್ತಾವನೆಗಳನ್ನು ಪರಿಶೀಲಿಸಿ ಅಗತ್ಯ ನಿಯಮ ರೂಪಿಸಿ ಮುಖ್ಯಮಂತ್ರಿಯ ಅನುಮೋದನೆ ಪಡೆದು ಜಾರಿಗೆ ತರಲಾಗುವುದು ಎಂದು ಖಾದರ್ ಹೇಳಿದರು.

ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಖಾತೆ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, ಎಲ್ಲ ಗೊಂದಲಗಳನ್ನು ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಬಗೆಹರಿಸಲಿದ್ದಾರೆ. ರಾಜಕೀಯದಲ್ಲಿ ಇಂತಹ ಬೆಳವಣಿಗೆಗಳು ಸಹಜ. ಅಂತಿಮವಾಗಿ ರಾಜ್ಯದ ಜನರಿಗೆ ಉತ್ತಮ ಆಡಳಿತ ಮತ್ತು ಸೇವೆ ಒದಗಿಸುವುದೇ ಸರಕಾರದ ಗುರಿಯಾಗಿದೆ ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನ ಕೇಳುವುದು ಎಲ್ಲರ ಹಕ್ಕು. ಆದರೆ ಯಾರಿಗೆ ಅವಕಾಶ ನೀಡಬೇಕು ಎಂಬುದನ್ನು ಪಕ್ಷದ ನಾಯಕತ್ವವೇ ನಿರ್ಧರಿಸುತ್ತದೆ ಎಂದು ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST