ಬೆಳಗಾವಿ, ಸೆ 9 : (ಸಮದರ್ಶಿ ಸುದ್ದಿ) - ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರು, ಬೆಳಗಾವಿ, ಗೋಕಾಕ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆಗೆ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ ಪ್ರಕರಣದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಜಾರಿ ನಿರ್ದೇಶನಾಲಯ ಸ್ಪಷ್ಟಪಡಿಸಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ–1999ರ ಅಡಿಯಲ್ಲಿ ಈ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ. ಸತೀಶ ಜಾರಕಿಹೊಳಿ ಅವರ ನಿವಾಸಗಳ ಜತೆಗೆ ಅವರ ಆಪ್ತರಿಗೆ ಸೇರಿದ ಮನೆಗಳಲ್ಲಿಯೂ ಅಧಿಕಾರಿಗಳು ಶೋಧ ನಡೆಸಿದ್ದು, ವಿದೇಶಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮ ಹೂಡಿಕೆಗಳು ಮತ್ತು ಹಣಕಾಸು ವಹಿವಾಟುಗಳ ಕುರಿತು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬುಧವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸತೀಶ ಜಾರಕಿಹೊಳಿ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೆರಳಿ ಶೋಧ ನಡೆಸಿದರು. ಇದೇ ವೇಳೆ ಬೆಳಗಾವಿಯ ನಿವಾಸ ಹಾಗೂ ಸಚಿವರ ಆಪ್ತರಿಗೆ ಸೇರಿದ ಕೆಲವು ಸ್ಥಳಗಳಲ್ಲಿಯೂ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಆಫ್ರಿಕಾ, ಉಗಾಂಡ ಸೇರಿದಂತೆ ವಿವಿಧ ದೇಶಗಳಲ್ಲಿ ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಈ ಹೂಡಿಕೆಗಳು ಹಾಗೂ ಹಣಕಾಸು ವಹಿವಾಟುಗಳಲ್ಲಿ ಸತೀಶ ಜಾರಕಿಹೊಳಿ ಅವರ ಕಡೆಯಿಂದ ಯಾವುದೇ ಹಣ ಅಥವಾ ಹೂಡಿಕೆ ನಡೆದಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಇದಕ್ಕೂ ಮುನ್ನ ಜೂನ್ನಲ್ಲಿ ಮಂಜುನಾಥ ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಭಾಗಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಆ ಸಂದರ್ಭದಲ್ಲಿ ಅಬಕಾರಿ ಪರವಾನಗಿ ಅಕ್ರಮ, ಬೇನಾಮಿ ಬಾರ್ ಪರವಾನಗಿ ಹಾಗೂ ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿತ್ತು.
ಹೀಗಾಗಿ ಸತೀಶ ಜಾರಕಿಹೊಳಿ ಅವರ ನಿವಾಸಗಳ ಮೇಲಿನ ಶೋಧವೂ ಮಂಜುನಾಥ ಪ್ರಕರಣದ ಮುಂದುವರಿದ ಭಾಗವಾಗಿರಬಹುದು ಎಂಬ ಚರ್ಚೆ ನಡೆದಿತ್ತು. ಆದರೆ ಜಾರಿ ನಿರ್ದೇಶನಾಲಯದ ಇದೀಗದ ಅಧಿಕೃತ ಸ್ಪಷ್ಟನೆಯಿಂದಾಗಿ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣ ಮತ್ತು ಮಂಜುನಾಥ ಪ್ರಕರಣಗಳು ಪ್ರತ್ಯೇಕ ತನಿಖೆಗಳಾಗಿವೆ ಎಂಬುದು ಸ್ಪಷ್ಟವಾಗಿದೆ.