ಹೊಸದಿಲ್ಲಿ, ಜುಲೈ 17: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ ಕೋರಿ ಸುಪ್ರೀಮ ಕೋರ್ಟಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿರುವ ಸುಪ್ರೀಮ ಕೋರ್ಟ ಕಾಲಾವಕಾಶವನ್ನು ವಿಸ್ತರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದರು.
ಶುಕ್ರವಾರ ಹೊಸದಿಲ್ಲಿಯ ಕಾಂಗ್ರೆಸ್ ಪಕ್ಷದ ಹಳೆಯ ಕೇಂದ್ರ ಕಚೇರಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ಚುನಾವಣೆಗಳ ಜೊತೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದಿನ ವರ್ಷದ ಮಾರ್ಚ ಅಂತ್ಯದೊಳಗೆ ನಡೆಸಲಾಗುವುದು ಎಂದು ಹೇಳಿದರು.
ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಯಿಂದ ಮಹಾನಗರ ಪಾಲಿಕೆವರೆಗೆ ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸ್ಥಳೀಯ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ಅಧಿಕಾರದ ವಿಕೇಂದ್ರೀಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸಂವಿಧಾನದ 73ನೇ ಹಾಗೂ 74ನೇ ತಿದ್ದುಪಡಿಗಳ ಆಶಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಎಐಸಿಸಿ ಕಚೇರಿ ಕಾಂಗ್ರೆಸ್ ಕಾರ್ಯಕರ್ತರಿಗೆ ದೇವಾಲಯದಷ್ಟೇ ಪವಿತ್ರವಾದ ಸ್ಥಳವಾಗಿದೆ. ಪಕ್ಷದೊಂದಿಗೆ ಬೆಳೆದಿರುವ ನಮಗೆ ಅಲ್ಲಿಗೆ ಭೇಟಿ ನೀಡುವುದು ಮತ್ತು ಪಕ್ಷದ ನಾಯಕರನ್ನು ಭೇಟಿಯಾಗುವುದು ಕರ್ತವ್ಯವಾಗಿದೆ ಎಂದು ಶಿವಕುಮಾರ ಹೇಳಿದರು.
ಸಚಿವ ಸಂಪುಟ ವಿಸ್ತರಣೆಯ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ಭೇಟಿ ಮಾಡಲು ಸಾಧ್ಯವಾಗದ ಕಾರಣ, ಶನಿವಾರ ಭೇಟಿ ಮಾಡಿ ಅವರ ಮಾರ್ಗದರ್ಶನ ಪಡೆಯಲಾಗುವುದು. ನಂತರ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.