ಬೆಳಗಾವಿ, ಜೂ. 8 : ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ಘೋಷಿಸಿರುವ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಜೂನ್ 25ರಂದು ತೆರವಾಗಲಿರುವ ತಮ್ಮ ರಾಜ್ಯಸಭೆ ಸ್ಥಾನಕ್ಕೆ ಪಕ್ಷವು ಧಾರವಾಡದ ಎಂ. ನಾಗರಾಜ ಅವರ ಹೆಸರನ್ನು ಅಂತಿಮಗೊಳಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸುತ್ತಾ ಬಂದಿರುವ ನಾಗರಾಜ ಅವರು ಹಾಲುಮತ ಸಮುದಾಯಕ್ಕೆ ಸೇರಿದವರಾಗಿದ್ದು, ಅವರ ಆಯ್ಕೆಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಮತ್ತೊಂದು ಅವಕಾಶ ದೊರೆತಂತಾಗಿದೆ. ಪಕ್ಷದ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತಿದ್ದು, ಅಗತ್ಯವಿದ್ದರೆ ತಮ್ಮ ಅನುಭವದ ಮಾರ್ಗದರ್ಶನವನ್ನೂ ನೀಡುವುದಾಗಿ ಕಡಾಡಿ ತಿಳಿಸಿದರು. ನಾಗರಾಜ ಅವರು ಎಬಿವಿಪಿ ಹಿನ್ನೆಲೆಯಿಂದ ಬಂದವರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಿಂತನೆಗಳಲ್ಲಿ ಬೆಳೆದ ಕಾರ್ಯಕರ್ತರಾಗಿದ್ದಾರೆ ಎಂದರು.
ಅದೇ ರೀತಿ ವಿಧಾನ ಪರಿಷತ್ ಚುನಾವಣೆಗೆ ಧಾರವಾಡ-ಹುಬ್ಬಳ್ಳಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದು ಹಾಗೂ ಮೈಸೂರು ಭಾಗದಿಂದ ಹಿಂದುಳಿದ ವರ್ಗದ ಮಡಿವಾಳ ಸಮುದಾಯದ ರಘು ಕೌಟಿಲ್ಯ ಅವರಿಗೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ಹೇಳಿದರು.
ತಮ್ಮಂತೆ ಈಗ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳೂ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ದುಡಿದವರು. ಸಾಮಾನ್ಯ ಕಾರ್ಯಕರ್ತರಿಗೂ ರಾಜಕೀಯವಾಗಿ ಉನ್ನತ ಸ್ಥಾನಮಾನ ನೀಡುವ ಪರಂಪರೆಯನ್ನು ಬಿಜೆಪಿ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಡಾಡಿ ಅಭಿಪ್ರಾಯಪಟ್ಟರು.
ತಮ್ಮನ್ನು ಒಂದು ಅವಧಿಗೆ ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿದ ಪಕ್ಷದ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಪರಿಶ್ರಮವೇ ಬಿಜೆಪಿಯ ಶಕ್ತಿಯಾಗಿದೆ ಎಂದು ಹೇಳಿದರು.