ಬೆಳಗಾವಿ, ಜೂ. 8 : ಬಹುಕೋಟಿ ರೂಪಾಯಿ ಠೇವಣಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ, ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕನ್ನಡ ಚಿತ್ರರಂಗದ ಕೆಲವು ನಟ-ನಟಿಯರಿಗೆ ನೋಟಿಸ್ ಜಾರಿ ಮಾಡಿದೆ.
ನೋಟಿಸ್ ಪಡೆದವರಲ್ಲಿ ಕನ್ನಡ ಚಿತ್ರರಂಗದ ನಟರಾದ ಡಾಲಿ ಧನಂಜಯ, ವಶಿಷ್ಠ ಸಿಂಹ, ರಾಗಿಣಿ ದ್ವಿವೇದಿ ಹಾಗೂ ಸಪ್ತಮಿ ಗೌಡ ಸೇರಿದ್ದಾರೆ. ಕಳೆದ ಡಿಸೆಂಬರ್ 27ರಂದು ಬೆಳಗಾವಿಯಲ್ಲಿ ನಡೆದಿದ್ದ ಕನ್ನಡದ ಉತ್ಸವ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು. ಇದೀಗ ಆ ಕಾರ್ಯಕ್ರಮವೇ ಸಿಐಡಿ ತನಿಖೆಯ ಪ್ರಮುಖ ಭಾಗವಾಗಿ ಪರಿಣಮಿಸಿದೆ.
ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಉತ್ಸವಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಾವಿರಾರು ಜನರ ಸಮ್ಮುಖದಲ್ಲಿ ನಡೆದಿದ್ದ ಕಾರ್ಯಕ್ರಮದ ವೆಚ್ಚದ ಮೂಲಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ತನಿಖೆ ವೇಳೆ ಹೂಡಿಕೆದಾರರಿಂದ ಸಂಗ್ರಹಿಸಲಾದ ಹಣವನ್ನು ಕಾರ್ಯಕ್ರಮ ಆಯೋಜನೆಗೆ ಬಳಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ-ನಟಿಯರಿಂದ ಮಾಹಿತಿ ಪಡೆಯಲು ಸಿಐಡಿ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿವಂ ಅಸೋಸಿಯೇಟ್ಸ್ ವಿರುದ್ಧ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು, ವಿವಿಧ ಜಿಲ್ಲೆಗಳು ಹಾಗೂ ರಾಜ್ಯಗಳ ಸಾವಿರಾರು ಜನರು ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹೆಚ್ಚಿನ ಬಡ್ಡಿ ಹಾಗೂ ಆಕರ್ಷಕ ಲಾಭದ ಭರವಸೆ ನೀಡಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.