ಬೆಂಗಳೂರು, ಜೂನ್ 4 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ ಅವರು ಪಕ್ಷದ ರಾಷ್ಟ್ರೀಯ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ್ದು, ಕಾಂಗ್ರೆಸ್ ಸಂಘಟನೆ ಬಲವರ್ಧನೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್ ಗಾಂಧಿ ಹಾಗೂ ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ತಮ್ಮ ಮೇಲೆ ವಿಶ್ವಾಸವಿಟ್ಟು ರಾಜ್ಯ ಕಾಂಗ್ರೆಸ್ ಸಂಘಟನೆಯ ಜವಾಬ್ದಾರಿ ವಹಿಸಿರುವುದಕ್ಕೆ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿರುವ ಹರಿಪ್ರಸಾದ, ಇದು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ, ಕಾಂಗ್ರೆಸ್ ಪಕ್ಷ ಪ್ರತಿಪಾದಿಸುತ್ತಿರುವ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯಗಳು ಹಾಗೂ ದುರ್ಬಲ ವರ್ಗಗಳ ಸಬಲೀಕರಣಕ್ಕೆ ನೀಡಿರುವ ಬಲವಾದ ಸಂದೇಶವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೀರ್ಘಕಾಲದಿಂದ ಪಕ್ಷದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿರುವ ತಾವು ಯಾವುದೇ ಅಧಿಕಾರದ ಹುದ್ದೆಗಳಿಗಾಗಿ ರಾಜಕೀಯ ಮಾಡದೆ ಕಾಂಗ್ರೆಸ್ ಸಿದ್ಧಾಂತಗಳ ಅನುಷ್ಠಾನಕ್ಕಾಗಿ ಬದುಕು ಮೀಸಲಿಟ್ಟಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಅಧಿಕಾರಕ್ಕಿಂತ ಸಿದ್ಧಾಂತ ಮುಖ್ಯ, ಹುದ್ದೆಗಿಂತ ಜನರ ಹಿತವೇ ದೊಡ್ಡದು ಎಂಬ ನಂಬಿಕೆಯೊಂದಿಗೆ ರಾಜಕೀಯ ಜೀವನ ಸಾಗಿಸಿದ್ದು, ಪಕ್ಷ ಕಟ್ಟುವ ಜವಾಬ್ದಾರಿಯೆಂದು ಪರಿಗಣಿಸಿ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.
ದೇಶದಲ್ಲಿ ದ್ವೇಷದ ರಾಜಕಾರಣ, ಧಾರ್ಮಿಕ ಧ್ರುವೀಕರಣ ಹಾಗೂ ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ನೇತೃತ್ವ ಸಿಕ್ಕಿರುವುದು ದೊಡ್ಡ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಸಾಮರಸ್ಯ, ಜಾತ್ಯತೀತ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳ ಪರವಾಗಿ ನಿರಂತರ ಹೋರಾಟ ನಡೆಸಿರುವ ನನಗೆ ಈ ಸವಾಲು ಹೊಸ ಹೊಣೆಗಾರಿಕೆಯನ್ನು ತಂದಿದೆ. ಪಕ್ಷದ ಸೈದ್ಧಾಂತಿಕ ಕಾರ್ಯಕರ್ತರ ಬೆಂಬಲದೊಂದಿಗೆ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಆಶೋತ್ತರಗಳನ್ನು ಅರ್ಥಮಾಡಿಕೊಂಡಿದ್ದು, ಅವರ ಧ್ವನಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ. ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಮತ್ತಷ್ಟು ಸಂಘಟಿಸಿ ಸೈದ್ಧಾಂತಿಕವಾಗಿ ಬಲಿಷ್ಠಗೊಳಿಸುವ ಗುರಿ ಹೊಂದಿದ್ದೇನೆ ಎಂದಿದ್ದಾರೆ.
ರಾಜ್ಯದಲ್ಲಿ ಪಕ್ಷದ ಸಮರ್ಥ ನಾಯಕರು ಹಾಗೂ ಕಾರ್ಯಕರ್ತರ ಸಹಕಾರದಿಂದ ಸಂಘಟನೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುವವರು, ಕೋಮುವಾದದ ವಿರುದ್ಧ ಹೋರಾಡುವವರು, ಸಂವಿಧಾನ ರಕ್ಷಣೆಗೆ ಬದ್ಧರಾಗಿರುವವರು ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಎಲ್ಲ ವರ್ಗದ ಜನರು ಈ ಹೋರಾಟದಲ್ಲಿ ಕೈಜೋಡಿಸಬೇಕಿದೆ ಎಂದು ಕರೆ ನೀಡಿದ್ದಾರೆ.
ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಜಾತ್ಯತೀತ ಯುವ ಸಮುದಾಯವನ್ನು ಒಗ್ಗೂಡಿಸಿಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ ಹಾಗೂ ಜಾತ್ಯತೀತತೆಯೇ ನಮ್ಮ ಶಕ್ತಿ ಎಂಬ ಕಾಂಗ್ರೆಸ್ನ ಮೂಲ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು, ನಾಯಕರು, ಯುವಕರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಕಾರದೊಂದಿಗೆ ಹೊಸ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ಹರಿಪ್ರಸಾದ್ ತಿಳಿಸಿದ್ದಾರೆ.