ಉಡುಪಿ, ಜುಲೈ 29: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್, ವಿದ್ಯಾರ್ಥಿಗಳು ಹಾಗೂ 'ಕಾಕ್ರೋಚ್ ಜನತಾ ಪಾರ್ಟಿ' ನಡೆಸಿದ್ದ ಪ್ರತಿಭಟನೆಯನ್ನು ವಿರೋಧಿಸಿ ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ, ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್ ಭಾಗವಹಿಸಿದ್ದನ್ನು ಟೀಕಿಸಿದರು. ಕರಾವಳಿ ಭಾಗದ ಕಲಾವಿದರ ಮನಸ್ಸಿನಲ್ಲಿ ವಿಷದ ಬೀಜ ಬಿತ್ತುವ ಪ್ರಯತ್ನವನ್ನು ನಿಲ್ಲಿಸದಿದ್ದರೆ ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗುವ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದರು ಎಂದು ವರದಿಯಾಗಿದೆ.
ಜಂತರ್ ಮಂತರ್ನಲ್ಲಿ ನಡೆದ ನೀಟ್ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ನಿಜವಾದ ವಿದ್ಯಾರ್ಥಿಗಳಲ್ಲ. ಪ್ರತಿಭಟನಾಕಾರರ ಹಿನ್ನೆಲೆಯನ್ನು ಪರಿಶೀಲಿಸಿದರೆ ಸತ್ಯ ಹೊರಬರಲಿದೆ. ಈ ರೀತಿಯ ರಾಜಕೀಯ ಮುಂದುವರಿದರೆ ಬಿಜೆಪಿ ಕಾರ್ಯಕರ್ತರು ತಕ್ಕ ಉತ್ತರ ನೀಡಲಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಅದೇ ಭಾಷಣದಲ್ಲಿ, "1992ರಲ್ಲಿ ನಾವು ಬಾಬರಿ ಮಸೀದಿಯನ್ನು ಕೆಡವಿದಂತೆ, ನಾವು ಹಿಂದೂಗಳು ಅವರ ವಂಶವನ್ನು ನಾಶ ಮಾಡಲು ಸಿದ್ಧರಿದ್ದೇವೆ" ಎಂಬರ್ಥದ ಪ್ರಚೋದನಕಾರಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ನೀಡಿದರು ಎಂದು ಆರೋಪಿಸಲಾಗಿದೆ. ಈ ಹೇಳಿಕೆ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.
ಶಾಸಕರ ಹೇಳಿಕೆಗಳು ರಾಹುಲ್ ಗಾಂಧಿ ಹಾಗೂ ಅವರ ಬೆಂಬಲಿಗರಿಗೆ ಬಹಿರಂಗ ಬೆದರಿಕೆ ಒಡ್ಡುವ ಉದ್ದೇಶ ಹೊಂದಿದ್ದು, ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವಂತಿವೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಭಾವಚಿತ್ರಗಳಿಗೆ ಜಿರಳೆಯ ಆಕೃತಿಯನ್ನು ಅಂಟಿಸಿ, ಅದರ ಮೇಲೆ ಕೀಟನಾಶಕ ಸಿಂಪಡಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಶಾಸಕರ ಹೇಳಿಕೆಯನ್ನು ಭಾರತೀಯ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸವಾದಿ) ಸೇರಿದಂತೆ ಹಲವು ವಿರೋಧ ಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ. ಉಡುಪಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್ ಜಿಲ್ಲಾ ಘಟಕವೂ ಒತ್ತಾಯಿಸಿದೆ.
