ಹಾವೇರಿ, ಸೆ 13 : (ಸಮದರ್ಶಿ ಸುದ್ದಿ) - ಸೆಪ್ಟೆಂಬರ್ 14ರಿಂದ ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಆಚರಣೆ ಆರಂಭವಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಜಿಲ್ಲೆಯಲ್ಲಿ ಸುಮಾರು 2,315 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಸುಮಾರು ಒಂದು ತಿಂಗಳ ಕಾಲ ವಿವಿಧ ದಿನಗಳಲ್ಲಿ ವಿಸರ್ಜನಾ ಮೆರವಣಿಗೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಗಣೇಶೋತ್ಸವ ಆಯೋಜಕರು ಹಾಗೂ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸೌಹಾರ್ದ ಸಭೆಗಳನ್ನು ನಡೆಸಿದೆ.
ಬಂದೋಬಸ್ತ್ಗಾಗಿ ಒಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಒಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಐವರು ಡಿವೈಎಸ್ಪಿ, 15 ಸಿಪಿಐ ಮತ್ತು ಪಿಐ, 45 ಪಿಎಸ್ಐ, 50 ಎಎಸ್ಐ, 500 ಹೆಡ್ ಕಾನ್ಸ್ಟೇಬಲ್ ಮತ್ತು ಪೊಲೀಸ್ ಕಾನ್ಸ್ಟೇಬಲ್, 400 ಗೃಹರಕ್ಷಕ ಸಿಬ್ಬಂದಿ ಸೇರಿದಂತೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ತ್ವರಿತ ಕಾರ್ಯಾಚರಣೆ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹಬ್ಬದ ಅವಧಿಯಲ್ಲಿ ಡಿಜೆ ಹಾಗೂ ಅತಿಯಾದ ಶಬ್ದ ಉಂಟುಮಾಡುವ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ಗಣೇಶ ಮೂರ್ತಿಗಳ ಮೆರವಣಿಗೆ ನಡೆಯುವ ದಿನಗಳಲ್ಲಿ ಸಂಬಂಧಪಟ್ಟ ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೂ ನಿಷೇಧ ವಿಧಿಸಲಾಗುವುದು.
ವಿಸರ್ಜನಾ ಸ್ಥಳಗಳಲ್ಲಿ ಸ್ವಚ್ಛತೆ, ಬೆಳಕಿನ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಕಾವಲು ಗೋಪುರ, ಧ್ವನಿವರ್ಧಕ ವ್ಯವಸ್ಥೆ ಹಾಗೂ ಹೆಚ್ಚುವರಿ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ವಿದ್ಯುತ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಪಡೆಯಲಾಗಿದ್ದು, ಜಿಲ್ಲೆಯ ಎಲ್ಲ ಕಂದಾಯ ಅಧಿಕಾರಿಗಳು ಸ್ಥಳೀಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ಮೇಲೂ ವಿಶೇಷ ನಿಗಾ ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.