ಹೊಸದಿಲ್ಲಿ, ಜುಲೈ 21: ಹಲವು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚುಕ ಅವರನ್ನು ಸಫ್ದರಜಂಗ್ ಆಸ್ಪತ್ರೆಯಿಂದ ಅವರು ಬಯಸಿರುವ ಮೆದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿತು.
ವಾಂಗ್ಚುಕ ಅವರ ಪತ್ನಿ ಡಾ. ಗೀತಾಂಜಲಿ ಆಂಗ್ಮೊ, ಸಫ್ದರಜಂಗ್ ಆಸ್ಪತ್ರೆಯಿಂದ ತಮ್ಮ ಪತಿಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ತಿರಸ್ಕರಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ವಾಂಗ್ಚುಕ ಪರ ಹಿರಿಯ ವಕೀಲ ಅಖಿಲ್ ಸಿಬಲ್ ವಾದ ಮಂಡಿಸಿ, ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿರುವ ಹಾಗೂ ಸ್ವತಃ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ ವ್ಯಕ್ತಿಗೆ ತಾನು ಎಲ್ಲಿ ಚಿಕಿತ್ಸೆ ಪಡೆಯಬೇಕು ಎಂಬುದನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಬಂಧನದಲ್ಲಿಲ್ಲದ ವ್ಯಕ್ತಿಯ ವೈದ್ಯಕೀಯ ಸ್ವಾಯತ್ತತೆಯನ್ನು ಗೌರವಿಸಬೇಕು. ಚಿಕಿತ್ಸೆಯ ಪ್ರತಿಯೊಂದು ಹಂತವೂ ಪಾರದರ್ಶಕವಾಗಿರಬೇಕು ಎಂದು ಅವರು ವಾದಿಸಿದರು.
ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, ವ್ಯಕ್ತಿಯ ವೈಯಕ್ತಿಕ ನಿರ್ಧಾರದ ಹಕ್ಕು ಮಹತ್ವದ್ದಾದರೂ, ಜೀವ ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು. ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟರೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಿದೆ ಎಂದು ಅವರು ಹೇಳಿದರು.