ಬೆಳಗಾವಿ, ಮೇ 9 : ಮದುವೆಯಾಗಿ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿ ಮನೆಯಲ್ಲಿಯೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಹಸೀನಾ ನದಾಫ್ ಹಾಗೂ ಆಕೆಯ ಪ್ರಿಯಕರ ಹಣಮಂತ ಮಾರಾಪೂರನನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಮೂಡಲಗಿ ತಾಲೂಕಿನ ನಿವಾಸಿಯಾಗಿರುವ ಹಸೀನಾ, ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಎಂಬಾತನನ್ನು ವಿವಾಹವಾಗಿದ್ದಳು. ಆದರೆ ಮದುವೆಗೆ ಮುನ್ನವೇ ಹಸೀನಾ ಬೇರೊಬ್ಬನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಮದುವೆಯಾದ ಬಳಿಕವೂ ಆಕೆ ತನ್ನ ಪ್ರಿಯಕರ ಹಣಮಂತನ ಸಂಪರ್ಕದಲ್ಲೇ ಇದ್ದು, ಇಬ್ಬರೂ ಸೇರಿ ಮನೆ ಕಳ್ಳತನದ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪತಿ ಮನೆಯಲ್ಲಿದ್ದ 154.6 ಗ್ರಾಂ ಚಿನ್ನಾಭರಣ ಹಾಗೂ 45 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿದೆ. ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 21 ಲಕ್ಷ ರೂ. ಆಗಿದ್ದು, ಬೆಳ್ಳಿ ಆಭರಣಗಳ ಮೌಲ್ಯ ಸುಮಾರು 11 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಕಳ್ಳತನ ನಡೆದಿರುವುದು ಗೊತ್ತಾಗುತ್ತಿದ್ದಂತೆ ದಿಲಶಾದ್ ನದಾಫ್ ಕಟಕೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ನೇತೃತ್ವದ ತಂಡ ತನಿಖೆ ಆರಂಭಿಸಿತು.
ಮೊಬೈಲ್ ಕರೆ ವಿವರಗಳು ಹಾಗೂ ಇತರೆ ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ 48 ಗಂಟೆಗಳಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.
ಪ್ರಾಥಮಿಕ ವಿಚಾರಣೆಯಲ್ಲಿ ಪ್ರಿಯಕರನೊಂದಿಗೆ ಓಡಿಹೋಗಲು ಹಣದ ಅವಶ್ಯಕತೆ ಇದ್ದ ಕಾರಣ ಕಳ್ಳತನಕ್ಕೆ ಮುಂದಾಗಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ ಕಳುವಾದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.