ಬೆಳಗಾವಿ, ಜುಲೈ 17: ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಿ ಸ್ಪಷ್ಟ ಬಹುಮತ ನೀಡಿದರೆ, 2028ರ ವಿಧಾನಸಭೆ ಚುನಾವಣೆಯ ಬಳಿಕ ನನ್ನ ತಂದೆ ಸತೀಶ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಮಾತನಾಡಿದ ಅವರು, "ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು ಎಂಬುದು ಕೇವಲ ನಮ್ಮ ಕುಟುಂಬದ ಆಶಯವಲ್ಲ. ಅಂತಿಮವಾಗಿ ಜನರ ಆಶೀರ್ವಾದ ಹಾಗೂ ಪಕ್ಷದ ತೀರ್ಮಾನವೇ ನಿರ್ಧಾರಕವಾಗಲಿದೆ. 2028ರಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಜನಾದೇಶ ದೊರೆತರೆ, ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂಬ ವಿಶ್ವಾಸವಿದೆ" ಎಂದು ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿಯೂ ರಸ್ತೆ, ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಟಿಎಸ್ಪಿ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಚಿಕ್ಕೋಡಿ ವಿಭಾಗದ ಬರಪೀಡಿತ ಪ್ರದೇಶಗಳ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಅಗತ್ಯ ಅನುದಾನ ಹಾಗೂ ಪರಿಹಾರ ಕ್ರಮಗಳಿಗಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿ, ರೈತರ ಹಿತಾಸಕ್ತಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ವಿಜಯಪುರ–ಶೇಡಬಾಳ ನೂತನ ರೈಲು ಮಾರ್ಗ ಯೋಜನೆ ಕಳೆದ ಹತ್ತು ವರ್ಷಗಳಿಂದ ಬಾಕಿ ಉಳಿದಿದೆ. ಯೋಜನೆಗೆ ವೇಗ ನೀಡುವಂತೆ ಶೀಘ್ರದಲ್ಲೇ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಈ ವಿಷಯವನ್ನು ಈಗಾಗಲೇ ಲೋಕಸಭೆಯಲ್ಲಿಯೂ ಪ್ರಸ್ತಾಪಿಸಿದ್ದರೂ ನಿರೀಕ್ಷಿತ ಪ್ರಗತಿ ಆಗಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಈ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಮತ್ತೊಮ್ಮೆ ಒತ್ತಾಯಿಸಲಾಗುವುದು ಎಂದು ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.