
ಬೆಳಗಾವಿ, ಆಗಸ್ಟ್ 13: ವೈಶಿಷ್ಟ್ಯಪೂರ್ಣ ಬೆಳಗಾವಿಯ ಗಣೇಶೋತ್ಸವವನ್ನು ಎಲ್ಲರ ಸಹಕಾರದೊಂದಿಗೆ ವ್ಯವಸ್ಥಿತವಾಗಿ, ಸೌಹಾರ್ದಯುತವಾಗಿ ಹಾಗೂ ದೇಶಕ್ಕೇ ಮಾದರಿಯಾಗುವಂತೆ ಆಚರಿಸೋಣ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.
ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವ ಆಚರಣೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ಕುರಿತು ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು ಮತ್ತು ಗಣೇಶ ಮೂರ್ತಿಕಾರರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣೇಶೋತ್ಸವದ ಯಶಸ್ವಿ ಆಚರಣೆಗೆ ಜಿಲ್ಲಾಡಳಿತದೊಂದಿಗೆ ಎಲ್ಲ ಇಲಾಖೆಗಳು ಕೈಜೋಡಿಸಿವೆ. ಗಣೇಶ ಚತುರ್ಥಿಗೆ ಸಾಕಷ್ಟು ಮುಂಚಿತವಾಗಿಯೇ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು. ರಸ್ತೆ ಗುಂಡಿಗಳನ್ನು ಮುಚ್ಚುವುದು, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಎಲ್ ಆ್ಯಂಡ್ ಟಿ ಸಂಸ್ಥೆಗೆ ಸೂಚಿಸಲಾಗಿದೆ. ಪಾಲಿಕೆ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರೊಂದಿಗೆ ಖುದ್ದಾಗಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಗಣೇಶೋತ್ಸವ ಮಂಡಳಿಗಳಿಗೆ ವಿದ್ಯುತ್ ಶುಲ್ಕ ಪಾವತಿಸಲು ಅಗತ್ಯ ಹಣಕಾಸಿನ ನೆರವು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಮಂಡಳಿಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಗಣೇಶೋತ್ಸವವನ್ನು ಸೌಹಾರ್ದಯುತವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸೋಣ ಎಂದು ಅವರು ಹೇಳಿದರು.

ಪೊಲೀಸ್ ಆಯುಕ್ತ ಭೂಷಣ ಬೋರಸೆ ಮಾತನಾಡಿ, ನಗರದಲ್ಲಿ ಸುಮಾರು 14 ಲಕ್ಷ ಜನಸಂಖ್ಯೆಯಿದ್ದು, 1,400 ಪೊಲೀಸ್ ಸಿಬ್ಬಂದಿ ಹಾಗೂ 140 ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದೈನಂದಿನ ಭದ್ರತಾ ಕಾರ್ಯಗಳ ಜೊತೆಗೆ ಗಣೇಶೋತ್ಸವದ ಸಂದರ್ಭದಲ್ಲಿ ಹೆಚ್ಚುವರಿ ಕಾರ್ಯಭಾರವೂ ಇರುವುದರಿಂದ ಮಂಡಳಿಗಳ ಪದಾಧಿಕಾರಿಗಳು ಪೊಲೀಸರೊಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಪೊಲೀಸ್ ಕಾವಲು ನಿಯೋಜಿಸಲಾಗುವುದು. ಗಣೇಶೋತ್ಸವದ ಪೆಂಡಾಲ್ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು. ಗಣೇಶ ಮೂರ್ತಿಯ ಎತ್ತರ, ವಿದ್ಯುತ್ ಅಲಂಕಾರ, ಪೆಂಡಾಲ್ ಸೇರಿದಂತೆ ಎಲ್ಲ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಡಿಜೆ ಬಳಕೆಗೆ ನಿಷೇಧವಿದ್ದು, ಅಶ್ಲೀಲ ಹಾಡುಗಳನ್ನು ಪ್ರಸಾರ ಮಾಡಬಾರದು. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಗೆ ನಿಗದಿತ ಮಿತಿಯನ್ನು ಪಾಲಿಸಬೇಕು. ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಮಂಡಳಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಮಹಾನಗರ ಪಾಲಿಕೆ ಉಪಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ರಸ್ತೆ ಗುಂಡಿಗಳನ್ನು ಮುಚ್ಚುವುದರ ಜತೆಗೆ ರಸ್ತೆ ದುರಸ್ತಿ, ನಗರದ ಸ್ವಚ್ಛತೆ ಹಾಗೂ ಹೊಂಡಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಗಣೇಶೋತ್ಸವ ಮಂಡಳಿಗಳಿಗೆ ವಿದ್ಯುತ್ ಶುಲ್ಕ ಪಾವತಿಸಲು ಪಾಲಿಕೆಯಿಂದ ಅಗತ್ಯ ಹಣಕಾಸಿನ ನೆರವು ಒದಗಿಸಲಾಗುವುದು. ಗಣೇಶೋತ್ಸವದ ಯಶಸ್ವಿ ಆಚರಣೆಗೆ ಪಾಲಿಕೆಯ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಮಾತನಾಡಿ, 11 ದಿನಗಳ ಗಣೇಶೋತ್ಸವಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳಿಗೆ ಆದ್ಯತೆ ನೀಡಲಾಗುವುದು. ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹೊಂಡಗಳ ಬಳಿ ಕ್ರೇನ್ಗಳು, ತಂತ್ರಜ್ಞರು ಹಾಗೂ ಮುಳುಗು ತಜ್ಞರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
ಪಾಲಿಕೆ ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ್ ಮಾತನಾಡಿದರು. ಮೇಯರ್ ಪ್ರೀತಿ ಕಾಮಕರ, ಪ್ರೊಬೇಷನರಿ ಡಿಸಿ ರೋಹಿತ್ ಸಿಂಗ್, ಹೆಚ್ಚುವರಿ ಪೊಲೀಸ್ ಆಯುಕ್ತ ಆರ್.ಬಿ. ಬಸರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಪಾಲಿಕೆ ಪರಿಷತ್ ಕಾರ್ಯದರ್ಶಿ ಲಕ್ಷ್ಮೀ ನಿಪ್ಪಾಣಿಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಗಣಪತಿ ಉತ್ಸವ ಮಹಾಮಂಡಳದ ಅಧ್ಯಕ್ಷ ವಿಕಾಸ್ ಕಲಘಟಗಿ, ಉಪಾಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ವಿವಿಧ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು ಸಭೆಯಲ್ಲಿ ಸಲಹೆ-ಸೂಚನೆಗಳನ್ನು ನೀಡುವುದರ ಜತೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿದರು.
ಪಾಲಿಕೆ ಪರಿಸರ ಅಭಿಯಂತರ ಹನುಮಂತ ಕಲಾದಗಿ ಸ್ವಾಗತಿಸಿ, ವಂದಿಸಿದರು. ನಗರದ ವಿವಿಧ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು ಹಾಗೂ ಗಣೇಶ ಮೂರ್ತಿಕಾರರು ಸಭೆಯಲ್ಲಿ ಉಪಸ್ಥಿತರಿದ್ದರು.