ಬೆಂಗಳೂರು, ಮೇ 12 : ನೀಟ್ ಯುಜಿ 2026 ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿರುವುದು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಕ್ರಮದ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಪದೇ ಪದೇ ಉಂಟಾಗುತ್ತಿರುವ ವೈಫಲ್ಯಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ವರ್ಷಗಳ ಕಾಲ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಿಢೀರ್ ಮರುಪರೀಕ್ಷೆ ಘೋಷಣೆ ಗದಾಪ್ರಹಾರದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮಕ್ಕಳ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಲು ರಾಜ್ಯ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರದ ಬೇಜವಾಬ್ದಾರಿಯುತ ನಿರ್ಧಾರಗಳು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಹತಾಶೆಗೆ ದೂಡುತ್ತಿವೆ ಎಂದು ಹೇಳಿದರು.
ದೇಶದ ಜನರಿಗೆ ಇಂಧನ ಉಳಿಸುವ ಕುರಿತು ಬುದ್ಧಿಮಾತು ಹೇಳುವ ಕೇಂದ್ರ ಸರ್ಕಾರಕ್ಕೆ ತನ್ನ ಮೂಲ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೇ ಎಂದು ಪ್ರಶ್ನಿಸಿದ ಸಚಿವರು, ಜನರಿಗೆ ಜೀವನಶೈಲಿ ಪಾಠ ಮಾಡುವ ಮುನ್ನ ಕನಿಷ್ಠ ಒಂದು ನೀಟ್ ಪರೀಕ್ಷೆಯನ್ನಾದರೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಡೆಸುವ ಜವಾಬ್ದಾರಿ ತೋರಬೇಕು ಎಂದು ಟೀಕಿಸಿದರು.
ಈ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರ ಮೌನವನ್ನೂ ಅವರು ಕಟುವಾಗಿ ಪ್ರಶ್ನಿಸಿದರು. ಸಣ್ಣಪುಟ್ಟ ವಿಷಯಗಳಿಗೂ ರಾಷ್ಟ್ರೀಯ ಹಿತಾಸಕ್ತಿಯ ಹೆಸರಿನಲ್ಲಿ ಮಾತನಾಡುವ ಬಿಜೆಪಿ ನಾಯಕರು, ಕೇಂದ್ರದ ಈ ದೊಡ್ಡ ವೈಫಲ್ಯದ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳು ಪದೇ ಪದೇ ನಡೆಯುತ್ತಿದ್ದರೂ ಕೇಂದ್ರದ ಮೇಲೆ ಒತ್ತಡ ತರಲು ಸ್ಥಳೀಯ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಇದು ಕೇವಲ ಪರೀಕ್ಷೆಯ ವಿಚಾರವಲ್ಲ, ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಹೇಳಿದರು.
ಕೇವಲ ಸಿಬಿಐ ತನಿಖೆಗೆ ಆದೇಶಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕ ಹಾಗೂ ಭದ್ರ ಪರೀಕ್ಷಾ ವ್ಯವಸ್ಥೆ ರೂಪಿಸಬೇಕು. ಇಲ್ಲವಾದರೆ ಪರೀಕ್ಷಾ ಪದ್ಧತಿಯ ಮೇಲಿನ ಜನರ ನಂಬಿಕೆ ಸಂಪೂರ್ಣ ಕುಸಿಯಲಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.