ಕಲಬುರಗಿ, ಎ.30 : ರಾಜ್ಯದ ನಾಯಕತ್ವದ ಗೊಂದಲ ಕುರಿತು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ. ಪರಮೇಶ್ವರ ಅವರು ಖರ್ಗೆ ಮುಖ್ಯಮಂತ್ರಿ ಆದರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಪಕ್ಷದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಮುಖ ನಿರ್ಧಾರಗಳಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಖರ್ಗೆ ಹೇಳಿದರು. ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದುದರಿಂದ ಬದಲಾವಣೆ ಕುರಿತು ಯಾವುದೇ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಆದರೆ ಈ ವಿಷಯ ಎದುರಾದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಇನ್ನೂ ಸಮಯವಿದ್ದು, ಸೂಕ್ತ ಸಂದರ್ಭದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಕೆಲವೆಡೆ ಗೊಂದಲದ ವರದಿಗಳು ಕೇಳಿಬರುತ್ತಿದ್ದರೂ, ಸಂಪೂರ್ಣ ಚಿತ್ರ ಸ್ಪಷ್ಟವಾಗಲು ಇನ್ನೂ ಎರಡು ದಿನ ಕಾಯಬೇಕಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಅಸ್ಸಾಂನಲ್ಲಿ ಏಕ್ಸಿಟ್ ಸಮೀಕ್ಷೆಗಳು ಕಡಿಮೆ ಸ್ಥಾನಗಳನ್ನು ಸೂಚಿಸಿದ್ದರೂ, ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದರು. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಎನ್ಡಿಎ ತೃಣಮೂಲ ಕಾಂಗ್ರೆಸ್ಗೆ ತೀವ್ರ ಸ್ಪರ್ಧೆ ನೀಡುತ್ತಿದ್ದರೂ, ಕಾಂಗ್ರೆಸ್ ಈ ಬಾರಿ ಸ್ವತಂತ್ರವಾಗಿ ಸ್ಪರ್ಧಿಸಿರುವುದನ್ನು ಉಲ್ಲೇಖಿಸಿದರು. ಬಿಜೆಪಿ ಹಾಗೂ ತೃಣಮೂಲ ಎರಡೂ ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಹಿನ್ನೆಲೆ, ಪೂರ್ಣ ಫಲಿತಾಂಶ ಹೊರಬಂದ ಬಳಿಕ ಬೆಂಬಲದ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ಸಾವಿನ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಹಳೆಯ ಗೋಡೆ ಕುಸಿತದಿಂದ ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕಾಂಪೌಂಡ್ ಪಕ್ಕದಲ್ಲಿ ಕುಳಿತು ತರಕಾರಿ ಮಾರಾಟ ಮಾಡುವವರಿಗೆ ಪರ್ಯಾಯ ಸ್ಥಳ ಒದಗಿಸಬೇಕು ಎಂದರು. ಇಂತಹ ಪರಿಸ್ಥಿತಿ ಕಲಬುರಗಿ ಸೇರಿದಂತೆ ಹಲವು ನಗರಗಳಲ್ಲಿ ಇದೆ. ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳು ಸ್ಪಂದಿಸಿ, ಅವರಿಗೆ ಸೂಕ್ತ ಜಾಗ ಮೀಸಲಿಟ್ಟು ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ಇಂದು ಬೆಂಗಳೂರಿನಲ್ಲಿ ಸಂಭವಿಸಿದ ಘಟನೆ ನಾಳೆ ಎಲ್ಲಿಯೂ ಸಂಭವಿಸಬಹುದು. ಆದ್ದರಿಂದ ಸರ್ಕಾರ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.