ಗುವಾಹಟಿ, ಮೇ 2 : ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ಈ ಬಾರಿ ಎಲ್ಲ ರಾಜ್ಯಗಳಲ್ಲೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ಗುವಾಹಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಚುನಾವಣೋತ್ತರ ಸಮೀಕ್ಷೆಗಳ ಕುರಿತು ಕೇಳಿದಾಗ, ಈ ಸಮೀಕ್ಷೆಗಳಲ್ಲಿ ಬಳಸುವ ಮಾದರಿ ಪ್ರಮಾಣ ತುಂಬಾ ಸಣ್ಣದಾಗಿರುತ್ತದೆ. ಹೀಗಾಗಿ ನಮ್ಮ ಲೆಕ್ಕಾಚಾರ ಬೇರೆ ಇದೆ. ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಿಲ್ಲ. ನಾನು ಇಲ್ಲಿಗೆ ಬಂದಿರುವುದು ನಮ್ಮ ಶಾಸಕರನ್ನು ರಕ್ಷಿಸಿ, ಮಾರ್ಗದರ್ಶನ ನೀಡಿ, ಶಕ್ತಿ ತುಂಬಲು ಎಂದು ಹೇಳಿದರು.
ಅಸ್ಸಾಂ ಚುನಾವಣೆ ಕುರಿತು ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅಸ್ಸಾಂನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ನಾಯಕರ ಮೇಲೆ ನಂಬಿಕೆ ಇದೆ. ಅವರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಮತದಾರರ ಮೇಲೆ ವಿಶ್ವಾಸವಿದೆ. ಅವರಿಗೆ ಬದಲಾವಣೆ ಬೇಕಾಗಿದೆ. ಆ ಬದಲಾವಣೆ ಖಚಿತವಾಗಿ ಸಿಗಲಿದೆ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.
ತಮಿಳುನಾಡು ಚುನಾವಣೆಯ ಬಗ್ಗೆ ಕೇಳಿದಾಗ, ದೇಶಾದ್ಯಂತ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಪಶ್ಚಿಮ ಬಂಗಾಳದ ಕುರಿತು ಕೇಳಿದಾಗಲೂ, ಪ್ರತಿಯೊಂದು ರಾಜ್ಯದಲ್ಲೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಪುನರುಚ್ಚರಿಸಿದರು.