ಬೆಳಗಾವಿ, ಜೂ. 8 : ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಬೆಳಗಾವಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಜೂ. 12ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆಯೋಜಿಸಿರುವ ಅಂತರರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನ ಮತ್ತು ಛಾಯಾಚಿತ್ರ ಉತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪತ್ರಿಕಾ ಕ್ಷೇತ್ರದಲ್ಲಿ ತಮ್ಮ ಕ್ಯಾಮೆರಾದ ಮೂಲಕ ಜನಸಾಮಾನ್ಯರ ಸಮಸ್ಯೆಗಳು, ಸಾಮಾಜಿಕ ಬೆಳವಣಿಗೆಗಳು, ರಾಜಕೀಯ ವಿದ್ಯಮಾನಗಳು ಹಾಗೂ ವಿವಿಧ ಕ್ಷೇತ್ರಗಳ ಮಹತ್ವದ ಕ್ಷಣಗಳನ್ನು ಪರಿಣಾಮಕಾರಿಯಾಗಿ ದಾಖಲಿಸಿರುವ ಪಿ.ಕೆ. ಬಡಿಗೇರ ಅವರ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.
ಸುದೀರ್ಘ ಅವಧಿಯಿಂದ ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು, ವೃತ್ತಿಪರ ಬದ್ಧತೆ ಮತ್ತು ಸೃಜನಶೀಲ ಛಾಯಾಗ್ರಹಣದ ಮೂಲಕ ವಿಶಿಷ್ಟ ಗುರುತನ್ನು ಮೂಡಿಸಿಕೊಂಡಿದ್ದಾರೆ. ಅವರ ಸಾಧನೆಗೆ ರಾಜ್ಯ ಮಟ್ಟದ ಈ ಗೌರವ ಲಭಿಸಿರುವುದು ಬೆಳಗಾವಿ ಜಿಲ್ಲೆಯ ಪತ್ರಿಕಾ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.