ಶಿವಮೊಗ್ಗ, ಸೆ. 16 : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಮವಸ್ತ್ರದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಬಿಜೆಪಿ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿದಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಇಬ್ಬರೂ ಸಿಬ್ಬಂದಿಯನ್ನು ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಸಮೀಪ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಚೆನ್ನಬಸಪ್ಪ ಅವರನ್ನು ಸಮವಸ್ತ್ರದಲ್ಲಿದ್ದ ಇಬ್ಬರು ಸಂಚಾರಿ ಪೊಲೀಸ್ ಸಿಬ್ಬಂದಿ ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮದಿಂದ ಕುಣಿದಾಡಿದ್ದರು. ಈ ದೃಶ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಚರ್ಚೆಗೆ ಕಾರಣವಾಗಿತ್ತು.
ಪೊಲೀಸ್ ಸಿಬ್ಬಂದಿ ಸಮವಸ್ತ್ರದಲ್ಲಿರುವಾಗ ಜನಪ್ರತಿನಿಧಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಕುಣಿದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಗಳು ವ್ಯಕ್ತವಾದ ನಂತರ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ ಹಾಗೂ ಪ್ರಕಾಶ ಎ.ಕೆ. ಅವರನ್ನು ವರ್ಗಾವಣೆ ಮಾಡಲಾಗಿದೆ. ಗಣೇಶ್ ಅವರನ್ನು ಆಗುಂಬೆ ಪೊಲೀಸ್ ಠಾಣೆಗೆ, ಪ್ರಕಾಶ್ ಎ.ಕೆ. ಅವರನ್ನು ಆನವಟ್ಟಿ ಪೊಲೀಸ್ ಠಾಣೆಗೆ ವರ್ಗಾಯಿಸಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಆದೇಶ ಹೊರಡಿಸಿದ್ದಾರೆ.