ಹೊಸದಿಲ್ಲಿ, ಸೆ 3 : (ಸಮದರ್ಶಿ ಸುದ್ದಿ) - ಬಾಲಾಕೋಟ್ ದಾಳಿ ಬಳಿಕ ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ, ಪಾಕಿಸ್ತಾನದ ವಶಕ್ಕೆ ಸಿಲುಕಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರ ಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ಅವರು ವಾಯುಪಡೆಯಿಂದ ಅವಧಿಗೂ ಮುನ್ನ ನಿವೃತ್ತಿ ಪಡೆದಿದ್ದಾರೆ. ಇದೀಗ ಅವರು ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಜೀವನ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಸುಮಾರು 22 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದ ಅಭಿನಂದನ್ ಅವರು ಆಗಸ್ಟ್ನಲ್ಲಿ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ ಫ್ಲೈ91ಗೆ ಪೈಲಟ್ ಆಗಿ ಸೇರ್ಪಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಆದರೆ ಅಭಿನಂದನ್ ವರ್ಧಮಾನ್ ಅವರು ಈ ಕುರಿತು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಫ್ಲೈ91 ಸಂಸ್ಥೆಯ ವಕ್ತಾರರು ಉದ್ಯೋಗಿಗಳ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಈ ವಿಚಾರ ಖಾಸಗಿಯಾಗಿದೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನದ ವಶಕ್ಕೆ ಸಿಲುಕಿದ್ದ ಅಭಿನಂದನ್
2019ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್ಪಿಎಫ್ ಯೋಧರು ಹುತಾತ್ಮರಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಇದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಬಾಲಾಕೋಟ್ನಲ್ಲಿದ್ದ ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.
ಈ ವೇಳೆ ಮಿಗ್-21 ಬೈಸನ್ ಯುದ್ಧವಿಮಾನದ ಪೈಲಟ್ ಆಗಿದ್ದ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಬಳಿಕ ಅವರ ವಿಮಾನ ಪಾಕಿಸ್ತಾನದ ಪ್ರದೇಶದಲ್ಲಿ ಪತನಗೊಂಡಿದ್ದು, ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿತ್ತು.
ಮೂರು ದಿನಗಳಲ್ಲಿ ಭಾರತಕ್ಕೆ ವಾಪಸ್
ಪಾಕಿಸ್ತಾನದ ವಶದಲ್ಲಿದ್ದ ಅಭಿನಂದನ್ ಅವರನ್ನು ರಾಜತಾಂತ್ರಿಕ ಒತ್ತಡ ಹಾಗೂ ಮಾತುಕತೆಯ ಬಳಿಕ ಕೇವಲ ಮೂರು ದಿನಗಳಲ್ಲಿ ಭಾರತಕ್ಕೆ ಹಸ್ತಾಂತರಿಸಲಾಯಿತು. ಭಾರತಕ್ಕೆ ಮರಳಿದ ಬಳಿಕ ಅವರ ಶೌರ್ಯ ದೇಶಾದ್ಯಂತ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು.
ಅಭಿನಂದನ್ ಅವರ ಧೈರ್ಯ ಮತ್ತು ಸಾಹಸವನ್ನು ಗುರುತಿಸಿ ಭಾರತ ಸರ್ಕಾರ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಿತ್ತು. ಪಾಕಿಸ್ತಾನದಲ್ಲಿ ಬಂಧನದಲ್ಲಿದ್ದ ವೇಳೆ ಅವರು ಚಹ ಸೇವಿಸುತ್ತಿರುವ ದೃಶ್ಯವೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.