ಬೆಂಗಳೂರು, ಸೆ 10 : (ಸಮದರ್ಶಿ ಸುದ್ದಿ) - ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ದಾಖಲೆಗಳಲ್ಲಿನ ವ್ಯತ್ಯಾಸ ಹಾಗೂ ಹಿಂದಿನ ಮತದಾರರ ಪಟ್ಟಿಯೊಂದಿಗೆ ಮಾಹಿತಿ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ತಾಯಿ ಗೌರಮ್ಮ ಸೇರಿದಂತೆ ಹಲವು ಗಣ್ಯರಿಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರಾಗಿರುವ ಗೌರಮ್ಮ ಅವರ ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ನೋಟಿಸ್ ನೀಡಲಾಗಿದೆ. ಇದೇ ಪಟ್ಟಿಯಲ್ಲಿ ಝೆರೋಧಾ ಸಂಸ್ಥೆಯ ನಿತಿನ್ ಕಾಮತ್, ನಿಖಿಲ್ ಕಾಮತ್ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅವರ ಕುಟುಂಬದ ಸದಸ್ಯರ ಹೆಸರುಗಳೂ ಸೇರಿವೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕಾಮತ್ ಮತ್ತು ನಿತಿನ್ ಕಾಮತ್ ಅವರ ದಾಖಲೆಗಳಲ್ಲಿ ಪೋಷಕರ ಹೆಸರಿಗೆ ಸಂಬಂಧಿಸಿದ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ತಾಯಿ ರೇವತಿ ಕಾಮತ್ ಅವರಿಗೂ ನೋಟಿಸ್ ಜಾರಿಗೊಳಿಸಲಾಗಿದೆ.
ಇದೇ ರೀತಿ ನಂದನ್ ನಿಲೇಕಣಿ ಅವರ ಪತ್ನಿ ರೋಹಿಣಿ ನಿಲೇಕಣಿ, ಮಗಳು ಜಾಹ್ನವಿ ನಂದನ್ ನಿಲೇಕಣಿ ಹಾಗೂ ಮಗ ನಿಹಾರ್ ನಿಲೇಕಣಿ ಅವರ ಹೆಸರುಗಳು 2002ರ ಮತದಾರರ ಪಟ್ಟಿಯೊಂದಿಗೆ ಹೊಂದಾಣಿಕೆಯಾಗಿಲ್ಲ. ಹೀಗಾಗಿ ಅವರಿಗೂ ನೋಟಿಸ್ ನೀಡಲಾಗಿದೆ.
ಮನೆಗೇ ತೆರಳಿ ಪರಿಶೀಲನೆ
ನೋಟಿಸ್ ಪಡೆದ ಗಣ್ಯರು ಹಾಗೂ ವಿಐಪಿಗಳಿಗೆ ಅನಾನುಕೂಲವಾಗದಂತೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಖುದ್ದಾಗಿ ಅವರ ಮನೆಗಳಿಗೆ ತೆರಳಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ.
ವಿಚಾರಣಾ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದ ಹಿರಿಯ ನಾಗರಿಕರು ಹಾಗೂ ಅಂಗವಿಕಲ ಮತದಾರರಿಗೂ ಇದೇ ರೀತಿಯ ನೆರವು ನೀಡಲಾಗುವುದು. ಸಾರ್ವಜನಿಕರಿಗೆ ಅಗತ್ಯ ಸಹಾಯ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ನಮೂನೆ 6, ತಿದ್ದುಪಡಿಗಾಗಿ ನಮೂನೆ 8, ವಿದೇಶಿ ಮತದಾರರಿಗೆ ನಮೂನೆ 6ಎ ಹಾಗೂ ಹೆಸರು ತೆಗೆದುಹಾಕಲು ನಮೂನೆ 7ರ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಮತ್ತು ಆಕ್ಷೇಪಣೆ ಸಲ್ಲಿಸಲು ಮತದಾರರಿಗೆ ಅನುಕೂಲವಾಗುವಂತೆ ಸೆಪ್ಟೆಂಬರ್ 19 ಮತ್ತು 20ರಂದು ವಿಶೇಷ ಅಭಿಯಾನ ಆಯೋಜಿಸಲಾಗುವುದು. ಈ ಸಂದರ್ಭದಲ್ಲಿ ಅಗತ್ಯ ಮಾರ್ಗದರ್ಶನ ಹಾಗೂ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹೇಶ್ವರ ರಾವ್ ತಿಳಿಸಿದ್ದಾರೆ.