ಬೆಂಗಳೂರು, ಮೇ 29 : ದೇವರು ಯಾರಿಗೂ ವರವನ್ನೂ ಕೊಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಜೀವನದಲ್ಲಿ ಅವಕಾಶಗಳನ್ನು ಮಾತ್ರ ಒದಗಿಸುತ್ತಾನೆ. ಆ ಅವಕಾಶಗಳನ್ನು ಬಳಸಿಕೊಂಡು ನಾವು ಏನು ಸಾಧನೆ ಮಾಡುತ್ತೇವೆ ಎಂಬುದೇ ವ್ಯಕ್ತಿಯ ಯಶಸ್ಸನ್ನು ನಿರ್ಧರಿಸುತ್ತದೆ. ಅದಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ಜೀವನವೇ ಅತ್ಯುತ್ತಮ ಉದಾಹರಣೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ, ಮೈಸೂರು ಜಿಲ್ಲೆಯ ಸಣ್ಣ ಹಳ್ಳಿಯೊಂದರಲ್ಲಿ ಜನಿಸಿ, ಹೋರಾಟದ ಮೂಲಕ ರಾಜಕೀಯ ಜೀವನ ಆರಂಭಿಸಿದ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಹಾಗೂ ಬಡವರ ಪರ ಧ್ವನಿಯಾಗಿ ರಾಜ್ಯ ರಾಜಕಾರಣದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರು ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ರಾಜಕೀಯ ಬೆಳವಣಿಗೆಯ ಮಹತ್ವದ ಘಟ್ಟವಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಅವರು ಜನಮನದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಅವರು ಧೀಮಂತ ನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಶಿವಕುಮಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜನಪರ ಯೋಜನೆಗಳ ಜಾರಿ, ಸಾಮಾಜಿಕ ನ್ಯಾಯದ ಪರ ನಿಲುವು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಆಡಳಿತದಲ್ಲಿ ತೋರಿದ ದಕ್ಷತೆ ಸಿದ್ದರಾಮಯ್ಯ ಅವರ ಆಡಳಿತದ ಪ್ರಮುಖ ವೈಶಿಷ್ಟ್ಯಗಳಾಗಿವೆ. ಸುಮಾರು 50 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಅವರು ಜನರ ಸಮಸ್ಯೆಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಜನಕೇಂದ್ರಿತ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
2020ರಲ್ಲಿ ತಾವು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ಇಂದಿನವರೆಗೆ ಸಿದ್ದರಾಮಯ್ಯ ಅವರು ತಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಕೈಜೋಡಿಸಿದ್ದಾರೆ. ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಅವರ ಮಾರ್ಗದರ್ಶನ ಮತ್ತು ಸಹಕಾರ ಮಹತ್ವದ ಪಾತ್ರ ವಹಿಸಿದೆ ಎಂದು ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಸಚಿವನಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆತಿರುವುದು ತಮ್ಮ ರಾಜಕೀಯ ಜೀವನದ ಭಾಗ್ಯಕರ ಕ್ಷಣಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿಯೂ ರಾಜ್ಯದ ಹಿತಾಸಕ್ತಿ ಹಾಗೂ ಪಕ್ಷದ ಬಲವರ್ಧನೆಗಾಗಿ ಅವರ ಅನುಭವ ಮತ್ತು ಮಾರ್ಗದರ್ಶನ ಲಭಿಸಲಿ ಎಂದು ಅವರು ಆಶಿಸಿದ್ದಾರೆ.
ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣ ಹಾಗೂ ಕರ್ನಾಟಕದ ಪ್ರಗತಿಯ ಗುರಿಯನ್ನು ಮುಂದಿಟ್ಟುಕೊಂಡು ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಸಾಗೋಣ ಎಂದು ಡಿ.ಕೆ. ಶಿವಕುಮಾರ ಕರೆ ನೀಡಿದ್ದಾರೆ.