ಕೊಯಂಬತ್ತೂರು: ನೀಟ್ ಪರೀಕ್ಷೆಯ ಭಯ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅನುಕೀರ್ತನಾ ಎಂದು ಗುರುತಿಸಲಾಗಿದೆ. ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದ ಆಕೆ, ಮೂರನೇ ಬಾರಿಗೆ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವ ಸಾಧ್ಯತೆ ಕುರಿತು ಮೂಡಿದ್ದ ಚರ್ಚೆಗಳು ಆಕೆಯಲ್ಲಿ ತೀವ್ರ ಆತಂಕ ಉಂಟುಮಾಡಿದ್ದವು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಮುನ್ನ ಅನುಕೀರ್ತನಾ ತಮ್ಮ ಸಂಬಂಧಿಕರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದು, "ಮತ್ತೆ ಪರೀಕ್ಷೆ ಬರೆಯಲು ನನಗೆ ಭಯವಾಗುತ್ತಿದೆ" ಎಂದು ಬರೆದಿದ್ದಾಳೆ ಎಂದು ತಿಳಿದುಬಂದಿದೆ.
ಅನುಕೀರ್ತನಾ ಅವರು ಕೋವೈಪುದೂರಿನ ಪಾರ್ಕ್ ಟೌನ್ ನಿವಾಸಿಯಾಗಿದ್ದು, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸೆಂಥಿಲ್ ಪ್ರಭು ಅವರ ಹಿರಿಯ ಪುತ್ರಿಯಾಗಿದ್ದರು. ಪ್ರಭು ಅವರಿಗೆ ಇಬ್ಬರು ಪುತ್ರಿಯರಿದ್ದು, ಅನುಕೀರ್ತನಾ ಖಾಸಗಿ ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದರು.
ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆ ಕುರಿತು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಘಟನೆ ಬಳಿಕ ತಮಿಳುನಾಡಿಗೆ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ನೀಟ್ ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳು ಮಾನಸಿಕ ಸಂಕಷ್ಟಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯಗಳಲ್ಲಿ ಹೊಸದಾಗಿ ಚರ್ಚೆ ಆರಂಭವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.