ಹೊಸದಿಲ್ಲಿ, ಜುಲೈ 16: ಸಿಬಿಎಸ್ಇ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯನ್ನು ಕಡ್ಡಾಯಗೊಳಿಸುವುದು ಸೂಕ್ತವಲ್ಲ ಎಂದು ಸುಪ್ರೀಮ ಕೋರ್ಟ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇಶದಲ್ಲಿ ಜಾರಿಯಲ್ಲಿರುವ ತ್ರಿಭಾಷಾ ನೀತಿಯ ಅನುಷ್ಠಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ಕಲಿಕೆಯ ಹಂತದಲ್ಲಿರುವ ಮಕ್ಕಳ ಮೇಲೆ ಅನಗತ್ಯ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡ ಹೇರುವ ಯಾವುದೇ ಕ್ರಮವನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದೆ.
ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಅಭಿಪ್ರಾಯವನ್ನು ದಾಖಲಿಸಿದೆ. ತಮಿಳುನಾಡಿನಲ್ಲಿ ಹಲವು ವರ್ಷಗಳಿಂದ ದ್ವಿಭಾಷಾ ನೀತಿ ಜಾರಿಯಲ್ಲಿದ್ದು, ಮೂರನೇ ಭಾಷೆಯನ್ನು ಕಡ್ಡಾಯಗೊಳಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಶಿಕ್ಷಣ ನೀತಿಗಳನ್ನು ರೂಪಿಸುವಾಗ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸ್ಪಷ್ಟಪಡಿಸಿತು.
ವಿದ್ಯಾರ್ಥಿಗಳಿಗೆ ಕಲಿಕೆಯ ವಾತಾವರಣವು ಮುಕ್ತ, ಆರೋಗ್ಯಕರ ಮತ್ತು ಒತ್ತಡರಹಿತವಾಗಿರಬೇಕು ಎಂದು ನ್ಯಾಯಪೀಠ ಹೇಳಿದೆ. ಪ್ರೌಢಶಾಲಾ ಹಂತಕ್ಕೆ ಪ್ರವೇಶಿಸುವ 9ನೇ ತರಗತಿಯ ವಿದ್ಯಾರ್ಥಿಗಳು ಈಗಾಗಲೇ ವಿವಿಧ ವಿಷಯಗಳ ಅಧ್ಯಯನದ ಒತ್ತಡವನ್ನು ಎದುರಿಸುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಹೆಚ್ಚುವರಿ ಭಾಷೆಯನ್ನು ಕಡ್ಡಾಯವಾಗಿ ಕಲಿಯುವಂತೆ ಒತ್ತಾಯಿಸುವುದು ಅವರ ಮೇಲೆ ಅನಗತ್ಯ ಶೈಕ್ಷಣಿಕ ಹಾಗೂ ಮಾನಸಿಕ ಹೊರೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಭಾಷಾ ಶಿಕ್ಷಣದ ಮಹತ್ವವನ್ನು ಯಾರೂ ನಿರಾಕರಿಸುವುದಿಲ್ಲ. ಆದರೆ ಅದನ್ನು ಕಡ್ಡಾಯಗೊಳಿಸುವ ಬದಲು ವಿದ್ಯಾರ್ಥಿಗಳ ಕಲಿಕೆಯ ಸಾಮರ್ಥ್ಯ, ವಯಸ್ಸು, ಪ್ರಾದೇಶಿಕ ಅಗತ್ಯಗಳು ಹಾಗೂ ರಾಜ್ಯಗಳ ಶೈಕ್ಷಣಿಕ ನೀತಿಗಳನ್ನು ಪರಿಗಣಿಸಿ ಅನುಷ್ಠಾನಗೊಳಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಮೂರನೇ ಭಾಷೆಯನ್ನು ಕಡ್ಡಾಯಗೊಳಿಸುವುದರಿಂದ ವಿದ್ಯಾರ್ಥಿಗಳಿಗೆ ಗಮನಾರ್ಹ ಪ್ರಯೋಜನವಾಗುವುದಕ್ಕಿಂತ ಹೆಚ್ಚುವರಿ ಒತ್ತಡ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಇಂತಹ ಕಠಿಣ ನಿಯಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮರುಚಿಂತನೆ ನಡೆಸುವುದು ಅಗತ್ಯ ಎಂದು ಸುಪ್ರೀಮ ಕೋರ್ಟ ಅಭಿಪ್ರಾಯಪಟ್ಟಿದೆ.
ತ್ರಿಭಾಷಾ ನೀತಿಯ ಜಾರಿ ಮತ್ತು ರಾಜ್ಯಗಳ ಶಿಕ್ಷಣ ನೀತಿಗೆ ಸಂಬಂಧಿಸಿದ ಈ ಪ್ರಕರಣದ ವಿಚಾರಣೆ ಮುಂದುವರಿದಿದೆ.