ಸಕಲೇಶಪುರ, ಸೆ. 16 : ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್ವೊಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ಮೂಲದ ವರ್ಷ (23) ಮೃತಪಟ್ಟ ಯುವತಿ ಎಂದು ತಿಳಿದುಬಂದಿದೆ. ಯುವತಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಲಭ್ಯ ಮಾಹಿತಿಯ ಪ್ರಕಾರ, ಸೆ. 11ರಂದು ವರ್ಷ ಇಬ್ಬರು ಸ್ನೇಹಿತರೊಂದಿಗೆ ಲಾಡ್ಜ್ಗೆ ಬಂದಿದ್ದರು ಎನ್ನಲಾಗಿದೆ. ಬಳಿಕ ಲಾಡ್ಜ್ನಲ್ಲಿಯೇ ಯುವತಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಯುವತಿ ಲಾಡ್ಜ್ಗೆ ಬಂದ ಬಳಿಕ ಏನಾಯಿತು, ಆಕೆಯ ಸಾವಿಗೆ ಕಾರಣವೇನು ಮತ್ತು ಸಾವಿನ ಸಂದರ್ಭದಲ್ಲಿ ಆಕೆಯೊಂದಿಗೆ ಯಾರು ಇದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.
ಇಬ್ಬರು ಸ್ನೇಹಿತರ ಬಗ್ಗೆ ಮಾಹಿತಿ ಸಂಗ್ರಹ
ಯುವತಿಯೊಂದಿಗೆ ಲಾಡ್ಜ್ಗೆ ಬಂದಿದ್ದರು ಎನ್ನಲಾಗಿರುವ ಇಬ್ಬರು ಸ್ನೇಹಿತರು ಸದ್ಯ ಎಲ್ಲಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಅವರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿದ ಬಳಿಕ ಡಿವೈಎಸ್ಪಿ ಮಾಲತೀಶ್ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರು ಲಾಡ್ಜ್ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್ ಸಿಬ್ಬಂದಿಯಿಂದಲೂ ಮಾಹಿತಿ ಪಡೆಯಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ.
ಯುವತಿಯ ಮೃತದೇಹವನ್ನು ಸಕಲೇಶಪುರದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯಿಂದ ಸಾವಿನ ಕುರಿತು ಹೆಚ್ಚಿನ ಮಾಹಿತಿ ಹೊರಬರಬೇಕಿದೆ.