LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಸಕರ ಪ್ರಮಾಣವಚನ; ಸಭಾಪತಿ ಸೂಚನೆ ಪಾಲಿಸದ ಶಾಸಕರು

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಸೇರಿದಂತೆ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.



ಮೇ 22ರಿಂದ ಮೇ 24ರ ವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇಂದು ಬೆಳಿಗ್ಗೆ 11.15ರ ಹೊತ್ತಿಗೆ ಅಧಿವೇಶನ ಆರಂಭವಾಯಿತು. ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಲಿದ್ದು ಮೂರನೇ ದಿನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.



ಶಾಸಕರಿಗೆ ಪ್ರಮಾಣವಚನ ಬೋಧಿಸುವ ಜವಾಬ್ದಾರಿಯನ್ನು ಹಿರಿಯ ಶಾಸಕ, ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಅವರು ವಹಿಸಿಕೊಂಡಿದ್ದು ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ. ಈ ನಡುವೆ, ಶಾಸಕರಿಗೆ ಪ್ರಮಾಣವಚನ ಬೋಧಿಸುವ ಹಂಗಾಮಿ ಸಭಾಪತಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಇದು ರಾಜಭವನದಲ್ಲಿ ನಡೆಯುವ ಪ್ರಕ್ರಿಯೆಯಾಗಿದೆ. ಅದಾದ ಬಳಿಕ ವಿಧಾನಸಭೆಯಲ್ಲಿ ಶಾಸಕರಿಗೆ ಪ್ರಮಾಣವಚನ ಬೋಧನೆ ಆರಂಭಗೊಂಡಿತು.



ಸಂವಿಧಾನ ಮತ್ತು ದೇವರ ಹೆಸರಲ್ಲಿ ಮಾತ್ರ ಪ್ರಮಾಣ ಸ್ವೀಕರಿಸಬಹುದು. ಇತರ ಯಾವುದೇ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ ಕಾನೂನು ಬದ್ಧ ಆಗುವುದಿಲ್ಲ ಎಂದು ಹಂಗಾಮಿ ಸಭಾಧ್ಯಕ್ಷ ಆರ್‌.ವಿ.ದೇಶಪಾಂಡೆ ಸೂಚನೆ ನೀಡಿದರೂ ಕೆಲ ಶಾಸಕರು ಅದನ್ನು ಪಾಲಿಸದೇ ತಮಗೆ ತಿಳಿದಂತೆ ಪ್ರಮಾಣವಚನ ಸ್ವೀಕರಿಸಿದರು.



ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಗವಂತ ಗಂಗಾಧರ ಅಜ್ಜಯ್ಯ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಕಾಂಗ್ರೆಸ್‌ನ ಶಿವಾನಂದ ಪಾಟೀಲ ಬಸವಣ್ಣ ಹೆಸರಲ್ಲಿ, ಬಸನಗೌಡ ಪಾಟೀಲ ಯತ್ನಾಳ ಹಿಂದುತ್ವ ಮತ್ತು ಗೋಮಾತೆ ಹೆಸರಲ್ಲಿ, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಭಗವಂತನ ಹೆಸರಲ್ಲಿ ಆರಾಧ್ಯದೈವ ಡಿ.ಕೆ.ಶಿವಕುಮಾರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು.



ಬಿಜೆಪಿ ಭಾಗೀರಥಿ ಮುರುಳ್ಯ ತಮ್ಮ ಕುಲದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುವಾಗ, ಬಸವರಾಜ ರಾಯರೆಡ್ಡಿ, ಹೀಗೆ ವಿವಿಧ ದೇವರುಗಳ ಹೆಸರು ಹೇಳುವುದು ಸರಿಯಲ್ಲ. ನಿಮ್ಮ ಮನಸ್ಸಿನಲ್ಲಿ ಹೇಳಿಕೊಳ್ಳಿ ಎಂದರು. ಗಾಲಿ ಜನಾರ್ದನ ರೆಡ್ಡಿ, ಗಂಗಾವತಿ ಜನತೆ, ಆಂಜನಾದ್ರಿ, ಹನುಮಂತನ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು. ಕಾಂಗ್ರೆಸ್‌ ಖಲೀಜ ಫಾತೀಮಾ ಅಲ್ಲಾನ ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣ ಸ್ವೀಕರಿಸಿದರು



ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆ ಸಚಿವರಾಗಿರುವ ಡಾ. ಜಿ. ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ, ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ ಪ್ರಮಾಣವಚನ ಸ್ವೀಕರಿಸಿದರು. ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ದೇವನಹಳ್ಳಿ ಶಾಸಕರಾಗಿ ಕೆ.ಎಚ್.ಮುನಿಯಪ್ಪ, ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ ಎಂ.ಬಿ.ಪಾಟೀಲ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ನಡುವೆ ಅಧಿವೇಶನಕ್ಕೆ ಸಚಿವರ ಪೈಕಿ ರಾಮಲಿಂಗಾರೆಡ್ಡಿ ಮತ್ತು ಜಮೀರ ಅಹಮದ ಖಾನ್ ಗೈರಾಗಿದ್ದರು.



ಯಮಕನಮರಡಿ ಶಾಸಕರಾಗಿ ಸತೀಶ​ ಜಾರಕಿಹೊಳಿ, ಚಿತ್ತಾಪುರ ಶಾಸಕರಾಗಿ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಶಾಸಕರಾಗಿ ರಾಮಲಿಂಗಾರೆಡ್ಡಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್​, ಬಸವನಬಾಗೇವಾಡಿ ಶಾಸಕರಾಗಿ ಶಿವಾನಂದ ಪಾಟೀಲ ಅವರೂ ಪ್ರಮಾಣವಚನ ಸ್ವೀಕರಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST