ಹೊಸದಿಲ್ಲಿ, ಜುಲೈ 25: ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನೀಟ್ ಅಕ್ರಮವನ್ನು ಖಂಡಿಸಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ದಿನೇ ದಿನೇ ಕಾಡ್ಗಿಚ್ಚಿನಂತೆ ವ್ಯಾಪಿಸಿ ಕೇಂದ್ರ ಸರ್ಕಾರದ ಮೇಲೆ ಅಭೂತಪೂರ್ವ ಒತ್ತಡ ಸೃಷ್ಟಿಸಿದ ಪರಿಣಾಮ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಶನಿವಾರ ಪ್ರಧಾನಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
ರಾಜೀನಾಮೆ ಪತ್ರದಲ್ಲಿ, "ದೇಶದ ಯುವಜನರು ಗೊಂದಲ ಮತ್ತು ಅನಿಶ್ಚಿತತೆಯ ವಾತಾವರಣದಲ್ಲಿ ಸಿಲುಕಿಕೊಳ್ಳಬಾರದು ಎಂಬ ಉದ್ದೇಶದಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ" ಎಂದು ಅವರು ತಿಳಿಸಿದ್ದಾರೆ.
ಎರಡು ಪುಟಗಳ ರಾಜೀನಾಮೆ ಪತ್ರವನ್ನು ಎಕ್ಸ್ ಖಾತೆಯಲ್ಲಿ ಪ್ರಕಟಿಸಿರುವ ಅವರು, "ಭಾರತದ ಪ್ರಜಾಪ್ರಭುತ್ವದ ಶಕ್ತಿಯ ಮೇಲೆ ನನಗೆ ಅಚಲ ನಂಬಿಕೆಯಿದೆ. ದೇಶದ ಯುವಕರ ಆಶಯಗಳನ್ನು ನಾನು ಸದಾ ಗೌರವಿಸುತ್ತೇನೆ. ಕಳೆದ ಹತ್ತು ದಿನಗಳಿಂದ ಜಂತರ್ ಮಂತರ್ನಲ್ಲಿ ನಡೆದ ಬೆಳವಣಿಗೆಗಳು ನನಗೆ ತೀವ್ರ ನೋವುಂಟು ಮಾಡಿವೆ" ಎಂದು ಹೇಳಿದ್ದಾರೆ.
ಜಂತರ್ ಮಂತರ್ನಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ರಾಷ್ಟ್ರವಿರೋಧಿ ಶಕ್ತಿಗಳು ಲಾಭ ಪಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಅವರು ಕರೆ ನೀಡಿದ್ದು, "ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ನಾನು ಸ್ವೀಕರಿಸಿದ್ದೇನೆ" ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಜಂತರ್ ಮಂತರ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಕಬ್ಬಿಣದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಭಾರೀ ಸರಪಳಿಗಳ ಮೂಲಕ ಬಲಪಡಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂಬ ಒತ್ತಾಯದೊಂದಿಗೆ ಸಿಜೆಪಿ ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದ ತೀವ್ರ ಪ್ರತಿಭಟನೆ ನಡೆಸುತ್ತಿತ್ತು. ರಾಜೀನಾಮೆ ನೀಡದಿದ್ದರೆ ವಾರಾಂತ್ಯದಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದರು.
ಪೊಲೀಸ್ ಮೂಲಗಳ ಪ್ರಕಾರ, ಹೊಸದಿಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ, ವಿಶೇಷವಾಗಿ ಜಂತರ್ ಮಂತರ್ ಹಾಗೂ ಅದರ ಸುತ್ತಮುತ್ತ ಬಹುಪದರದ ಕಬ್ಬಿಣದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಇದರ ನಡುವೆಯೇ, ಜಿರಳೆ ಜನತಾ ಪಕ್ಷ (ಸಿಜೆಪಿ) ದೆಹಲಿ ಪೊಲೀಸರ "ಹೆಚ್ಚುತ್ತಿರುವ ಸರ್ವಾಧಿಕಾರಿ ಕ್ರಮಗಳನ್ನು" ತೀವ್ರವಾಗಿ ಖಂಡಿಸಿದ್ದು, ಜಂತರ್ ಮಂತರ್ ಪ್ರದೇಶವನ್ನು ಬ್ಯಾರಿಕೇಡ್ಗಳ ಮೂಲಕ ಮುತ್ತಿಗೆ ಹಾಕುವ ಕ್ರಮವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದೆ.
