ಎಂ.ಕೆ.ಹುಬ್ಬಳ್ಳಿ, ಮೇ 24 : ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆಗೆ ತಲುಪಿದೆ. ಈಗಿನ ಸ್ಥಿತಿಯಲ್ಲಿ ಗ್ರಂಥಾಲಯ ಸಾರ್ವಜನಿಕರಿಗೆ ಸಂಪೂರ್ಣ ನಿರುಪಯುಕ್ತವಾಗಿದ್ದು, ತಕ್ಷಣ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಬೇಕು ಎಂದು ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬುಬಕರ ಖಾದ್ರಿ ಆಗ್ರಹಿಸಿದ್ದಾರೆ.

ಗ್ರಂಥಾಲಯದ ಮೇಲ್ಛಾವಣಿ ಕುಸಿಯುವ ಹಂತದಲ್ಲಿದ್ದು, ಗೋಡೆಗಳು ಸೇರಿದಂತೆ ಕಟ್ಟಡದ ಸ್ಥಿತಿ ಅಪಾಯಕಾರಿಯಾಗಿದೆ. ಗ್ರಂಥಾಲಯದ ಒಳಭಾಗದಲ್ಲಿಯೂ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿದ್ದು, ಓದುಗರಿಗೆ ಅಗತ್ಯವಾದ ಟೇಬಲ್ ಮತ್ತು ಕುರ್ಚಿಗಳ ವ್ಯವಸ್ಥೆಯೇ ಇಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಇದರಿಂದ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.

ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಸಾರ್ವಜನಿಕ ಗ್ರಂಥಾಲಯಗಳನ್ನೇ ಹೆಚ್ಚಾಗಿ ಅವಲಂಬಿಸಿರುವ ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವರ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಯಾವುದೇ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಬುಬಕರ ಖಾದ್ರಿ ಒತ್ತಾಯಿಸಿದ್ದಾರೆ.
