ಬೆಳಗಾವಿ, ಮೇ 12 : ತರಕಾರಿ ವ್ಯಾಪಾರಿಗಳಂತೆ ನಟಿಸಿ ಮನೆಗಳ ಮಾಹಿತಿ ಕಲೆಹಾಕಿ ಕಳ್ಳತನ ನಡೆಸುತ್ತಿದ್ದ ಅಂತರರಾಜ್ಯ ಕಳ್ಳರ ಜಾಲವನ್ನು ಬೆಳಗಾವಿ ಪೊಲೀಸರು ಪತ್ತೆಹಚ್ಚಿದ್ದಾರೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರಾಗಿದ್ದು, ಮನೆಗಳಿಗೆ ಬೀಗ ಹಾಕಿರುವುದನ್ನು ಗುರುತಿಸಿ ರಾತ್ರಿ ವೇಳೆ ಕಳ್ಳತನ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ತರಕಾರಿ ಮಾರಾಟದ ನೆಪದಲ್ಲಿ ವಿವಿಧ ಪ್ರದೇಶಗಳಲ್ಲಿ ಓಡಾಡುತ್ತಿದ್ದ ಆರೋಪಿಗಳು, ಜನರ ಸಂಚಾರ ಕಡಿಮೆ ಇರುವ ಮನೆಗಳನ್ನು ಗುರುತಿಸುತ್ತಿದ್ದರು. ಬಳಿಕ ರಾತ್ರಿ ತಂಡವಾಗಿ ಬಂದು ಮನೆ ಬೀಗ ಮುರಿದು ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು. ಈ ಕುರಿತು ಎಪಿಎಂಸಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಎಪಿಎಂಸಿ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಮಹಾರಾಷ್ಟ್ರ ಮೂಲದ ದೇವೇಂದ್ರ ವಾಘಮೋರೆ, ಸಚಿನ್ ಗೌಳಿ ಹಾಗೂ ಕಪಿಲ್ ಜಾಧವ್ ಅವರನ್ನು ಬಂಧಿಸಿದ್ದಾರೆ. ಅವರಿಂದ 4.71 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಎರಡು ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ.
ಶಹಾಪುರ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಉತ್ತರ ಪ್ರದೇಶ ಮೂಲದ ಮಿಂಟು ವಿಶ್ವಾಸ್ ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 44.86 ಲಕ್ಷ ರೂ. ಮೌಲ್ಯದ 290 ಗ್ರಾಂ ಚಿನ್ನ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳು ಶಿವಮೊಗ್ಗ, ಕಲಬುರಗಿ ಸೇರಿದಂತೆ ಗೋವಾ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ಪೊಲೀಸರಿಗೆ ಬೇಕಾಗಿದ್ದವರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಳ್ಳತನದಿಂದ ದೊರೆತ ಹಣದಲ್ಲಿ ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪಿಗಳು ಇದೀಗ ಜೈಲು ಸೇರಿದ್ದಾರೆ.
ಮನೆಗಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರು ಮನೆಗೆ ಬೀಗ ಹಾಕಿ ದೂರದ ಊರಿಗೆ ತೆರಳುವ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ. ಮನೆ ಮಾಲೀಕರು ಮರಳುವವರೆಗೆ ಮನೆಗಳ ಮೇಲೆ ನಿಗಾ ಇಟ್ಟು ನಿರಂತರ ಗಸ್ತು ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.