ಹೊಸದಿಲ್ಲಿ, ಜೂ. 11 : ಒಮಾನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ಅಮೆರಿಕದ ಸೇನೆ ನಡೆಸಿದ ದಾಳಿಯಲ್ಲಿ ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವುದು ದೃಢಪಟ್ಟಿದೆ. ಈ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಮೆರಿಕದ ವಿರುದ್ಧ ಅಧಿಕೃತ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸಿದೆ.
ಇರಾನ್ ಬಂದರಿನಿಂದ ತೈಲ ಸಾಗಿಸುತ್ತಿದ್ದ ಪಲಾವು ದೇಶದ ಧ್ವಜ ಹೊಂದಿದ್ದ ಸೆಟ್ಬೆಲ್ಲೊ ವಾಣಿಜ್ಯ ಹಡಗಿನ ಮೇಲೆ ಅಮೆರಿಕದ ಸೇನೆ ದಾಳಿ ನಡೆಸಿತ್ತು. ಇರಾನ್ ಮೇಲಿನ ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ತೈಲ ಸಾಗಣೆ ನಡೆಸಲಾಗುತ್ತಿತ್ತು ಹಾಗೂ ಅಮೆರಿಕದ ಸೂಚನೆಗಳನ್ನು ಪಾಲಿಸಲು ಹಡಗು ವಿಫಲವಾಗಿತ್ತು ಎಂಬ ಕಾರಣವನ್ನು ಅಮೆರಿಕ ಸಮರ್ಥನೆಯಾಗಿ ಮುಂದಿಟ್ಟಿತ್ತು.
ದಾಳಿಯ ಬಳಿಕ ಹಡಗಿನಲ್ಲಿದ್ದ 24 ಭಾರತೀಯ ಸಿಬ್ಬಂದಿಗಳ ಪೈಕಿ 21 ಮಂದಿಯನ್ನು ರಕ್ಷಿಸಲಾಗಿತ್ತು. ಆದರೆ ಮೂವರು ನಾವಿಕರು ನಾಪತ್ತೆಯಾಗಿದ್ದರು. ಅವರಿಗಾಗಿ ಹಲವು ದಿನಗಳಿಂದ ಶೋಧ ಕಾರ್ಯ ಮುಂದುವರಿದಿದ್ದರೂ, ಇದೀಗ ಆ ಮೂವರು ಮೃತಪಟ್ಟಿರುವುದು ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬೆಳವಣಿಗೆ ಭಾರತದಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದ್ದು, ಮೃತ ನಾವಿಕರ ಕುಟುಂಬಗಳಿಗೆ ಸಂತಾಪ ಸೂಚಿಸಲಾಗಿದೆ. ಜೊತೆಗೆ ಘಟನೆಯ ಸಂಪೂರ್ಣ ವಿವರಗಳನ್ನು ಪಡೆಯಲು ಭಾರತ ಸರ್ಕಾರ ರಾಜತಾಂತ್ರಿಕ ಮಟ್ಟದಲ್ಲಿ ಮುಂದಿನ ಕ್ರಮಗಳನ್ನು ಕೈಗೊಂಡಿದೆ.
ಇದೇ ವೇಳೆ, ಒಮಾನ್ ಕರಾವಳಿಯಲ್ಲಿ ನಡೆದ ದಾಳಿಯನ್ನು ಭಾರತ ಖಂಡಿಸಿದೆ. ವಿದೇಶಾಂಗ ಸಚಿವಾಲಯವು ಭಾರತದಲ್ಲಿನ ಅಮೆರಿಕದ ರಾಜತಾಂತ್ರಿಕ ಅಧಿಕಾರಿ ಜಾಸನ್ ಮೀಕ್ಸ್ ಅವರನ್ನು ಕರೆಸಿ ಬಲವಾದ ಪ್ರತಿಭಟನೆ ವ್ಯಕ್ತಪಡಿಸಿದೆ. ಈ ಸಂಬಂಧ ಅಧಿಕೃತ ರಾಜತಾಂತ್ರಿಕ ಟಿಪ್ಪಣಿಯನ್ನೂ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳು ಹಾಗೂ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಭಾರತ ಒತ್ತಾಯಿಸಿದೆ. ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ, ಸುರಕ್ಷಿತ ಹಾಗೂ ಅಡೆತಡೆಯಿಲ್ಲದ ಸಂಚಾರವನ್ನು ಶೀಘ್ರ ಪುನಃಸ್ಥಾಪಿಸುವುದು ಅಗತ್ಯ ಎಂದು ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.