ಹೊಸದಿಲ್ಲಿ, ಜುಲೈ 28: ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಪೋಷಕರ ಬೆಂಬಲವೂ ದೊರೆತ ಪರಿಣಾಮ ಕೇಂದ್ರ ಸರ್ಕಾರ ಒತ್ತಡಕ್ಕೆ ಮಣಿದು ಅವರ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕಾಯಿತು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ ಯಾದವ ಮಂಗಳವಾರ ಹೇಳಿದರು.
ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ–2026 ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ ಅವರು, ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆ ಮತ್ತು ಸರ್ಕಾರದ ವಿರುದ್ಧದ ಜನಾಕ್ರೋಶವೇ ಕೇಂದ್ರವನ್ನು ಹಿಂದೆ ಸರಿಯುವಂತೆ ಮಾಡಿತು ಎಂದು ಅಭಿಪ್ರಾಯಪಟ್ಟರು.
ಪ್ರತಿಭಟನೆಯ ಒತ್ತಡದ ನಡುವೆಯೇ ಸರ್ಕಾರ ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯೂ ಅದಕ್ಕೆ ಉದಾಹರಣೆಯಾಗಿದೆ ಎಂದು ಅವರು ಹೇಳಿದರು.
"ಸರ್ಕಾರ ಭಯಗೊಂಡಾಗ ಮತ್ತು ತತ್ತರಿಸಿದಾಗಲೇ ಜನರ ಬೇಡಿಕೆಗಳನ್ನು ಒಪ್ಪಿಕೊಳ್ಳುತ್ತದೆ. ಈ ಸಂದರ್ಭದಲ್ಲಿಯೂ ಸರ್ಕಾರ ಕೊನೆಗೆ ಬಾಗಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸ್ವೀಕರಿಸಬೇಕಾಯಿತು" ಎಂದು ಅಖಿಲೇಶ ಯಾದವ ಹೇಳಿದರು.
ಈ ಬೆಳವಣಿಗೆಯು ಸಮಸ್ಯೆಯನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ಅವರು ಆರೋಪಿಸಿದರು.
