ಶಿವಮೊಗ್ಗ, ಜೂ.15 : ರಾಜ್ಯ ಸರಕಾರ ತನ್ನ ಆರ್ಥಿಕ ಸ್ಥಿತಿಯ ಕುರಿತು ಕೂಡಲೇ ಶ್ವೇತಪತ್ರ ಹೊರಡಿಸಿ ಜನರ ಮುಂದೆ ವಾಸ್ತವ ಚಿತ್ರಣವನ್ನು ಇಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಭರವಸೆ ನೀಡಿತ್ತು. ಆದರೆ ಈಗ ಹೊಸ ದಾಖಲೆಗಳ ಹೆಸರಿನಲ್ಲಿ ಲಕ್ಷಾಂತರ ಫಲಾನುಭವಿಗಳನ್ನು ಯೋಜನೆಗಳಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಚುನಾವಣೆಗೆ ಮುನ್ನ ಯಾರಿಗೆ ಯೋಜನೆಗಳ ಲಾಭ ನೀಡುವುದಾಗಿ ಭರವಸೆ ನೀಡಲಾಗಿತ್ತೋ, ಅವರಿಗೆ ಯಾವುದೇ ಷರತ್ತುಗಳಿಲ್ಲದೆ ಸೌಲಭ್ಯ ಮುಂದುವರಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಕಡಿತಗೊಳಿಸುವ ಬದಲು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಸರಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ಹಿಮಾಚಲ ಪ್ರದೇಶ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಒತ್ತಡ ಹೆಚ್ಚಾಗಿದೆ. ಸರ್ಕಾರಿ ನೌಕರರ ಸಂಬಳ ಪಾವತಿಗೂ ಸಮಸ್ಯೆ ಎದುರಾಗಿದೆ. ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದೆ ಎಂದು ವಿಜಯೇಂದ್ರ ಹೇಳಿದರು.
ಸಿಎಂ ಡಿ.ಕೆ.ಶಿವಕುಮಾರ ಅವರ ತಾಳ್ಮೆಯನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಯಾವಾಗ ಕುರ್ಚಿ ಬಿಡುತ್ತಾರೆ ಎಂಬ ಪ್ರಶ್ನೆ ಇತ್ತು. ಕೊನೆಗೂ ಡಿ.ಕೆ.ಶಿವಕುಮಾರ ಕುರ್ಚಿ ಕಿತ್ತುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂಬ ಡಿ.ಕೆ.ಶಿವಕುಮಾರ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಆಡಳಿತ ವೈಫಲ್ಯ ಕಂಡುಬಂದಿದೆ ಎಂಬುದು ಜನರ ಅಭಿಪ್ರಾಯವಾಗಿದೆ ಎಂದು ಹೇಳಿದರು.
ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಬೇಡ
ಬಿಡದಿ ಪ್ರದೇಶದಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಮಾಡುವುದು ಅಕ್ಷಮ್ಯ. ಕನಿಷ್ಠ ಶೇ.70 ರೈತರ ಒಪ್ಪಿಗೆ ಅಗತ್ಯವಿದ್ದರೂ, ಇಲ್ಲಿ ಶೇ.90 ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರೈತರ ವಿರೋಧದ ನಡುವೆಯೂ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಶಾಸಕ ಎಂ.ಚಂದ್ರಪ್ಪ, ಸಂಸದ ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.