ಹೊಸದಿಲ್ಲಿ, ಜುಲೈ 28: ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಯ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ ಅವರನ್ನು ಸಂಸತ್ ಆವರಣದಲ್ಲಿ ಬಿಜೆಪಿ ಸಂಸದರು ಘೋಷಣೆ ಕೂಗಿ ಸ್ವಾಗತಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮುಂಗಾರು ಅಧಿವೇಶನದಲ್ಲಿ ಭಾಗವಹಿಸಲು ಸಂಸತ್ಗೆ ಆಗಮಿಸಿದ್ದ ಧರ್ಮೇಂದ್ರ ಪ್ರಧಾನ ಅವರನ್ನು ಬಿಜೆಪಿ ಸಂಸದರು ‘ಪ್ರಧಾನ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿ ಬರಮಾಡಿಕೊಂಡರು. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, ಪ್ರಧಾನ ಯಾವ ಪರಿಸ್ಥಿತಿಯಲ್ಲಿ ರಾಜೀನಾಮೆ ನೀಡಿದರು ಎಂಬುದು ದೇಶದ ಜನತೆಗೆ ಗೊತ್ತಿದೆ. ಆದರೂ ಅವರನ್ನು ಯಾವುದೋ ಸೂಪರ್ಸ್ಟಾರ್ನಂತೆ ಸ್ವಾಗತಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಹೇಳಿದರು.
ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಕೇಂದ್ರ ಸರ್ಕಾರ ಅವರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಮೋದಿ ಸರ್ಕಾರದ ಮೇಲೆ ಜನರ ವಿಶ್ವಾಸ ಉಳಿದಿಲ್ಲ. ಇಂದಿಗೂ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮಾತುಕತೆ ನಡೆಸುವ ಬದಲು ವಿದ್ಯಾರ್ಥಿಗಳ ಬೆನ್ನುಬಿದ್ದಿರುವುದು ಸಂಪೂರ್ಣ ತಪ್ಪು ಎಂದು ಕಿಡಿಕಾರಿದರು.
ಈ ಮಧ್ಯೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಸಂಸತ್ನಲ್ಲಿ ಧರ್ಮೇಂದ್ರ ಪ್ರಧಾನ ಅವರಿಗೆ ನೀಡಲಾದ ಸ್ವಾಗತವನ್ನು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಧರ್ಮೇಂದ್ರ ಪ್ರಧಾನ ಅವರು ಭ್ರಷ್ಟಾಚಾರ ಮತ್ತು ದೇಶದ ಹದಗೆಟ್ಟ ಶಿಕ್ಷಣ ವ್ಯವಸ್ಥೆಯ ಪ್ರತೀಕವಾಗಿದ್ದಾರೆ. ಇದೇ ವ್ಯವಸ್ಥೆಯಿಂದ 26 ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದು, ಲಕ್ಷಾಂತರ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿಲ್ಲ. ಯುವಜನರ ತೀವ್ರ ಆಕ್ರೋಶದ ಭಯದಿಂದಲೇ ಹುದ್ದೆ ತೊರೆಯಬೇಕಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದರು.
